ADVERTISEMENT

ಬದಲಾಯಿತು ವಸತಿ ಶಾಲೆ ವಿದ್ಯಾರ್ಥಿಗಳ ಬದುಕು

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 19:58 IST
Last Updated 9 ಸೆಪ್ಟೆಂಬರ್ 2019, 19:58 IST
   

ಕೈಲಾಂಚ (ರಾಮನಗರ): ಇಲ್ಲಿನ ಅಂಬೇಡ್ಕರ್‌ ವಸತಿ ಶಾಲೆಯ ವಿದ್ಯಾರ್ಥಿಗಳ ‘ಕಜ್ಜಿ’ ಸಮಸ್ಯೆ ಬಗೆಹರಿದಿದ್ದು, ಸದ್ಯ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಹಾಗೂ ವಸತಿ ಸೌಲಭ್ಯ ದೊರೆತಿದೆ.

ಮಕ್ಕಳ ಸಮಸ್ಯೆ ಕುರಿತು ‘ಪ್ರಜಾವಾಣಿ’ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಅದಾದ ಮರುದಿನವೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಮಕ್ಕಳ ಸಮಸ್ಯೆ ಆಲಿಸಿದ್ದರು.

ಸೋಮವಾರ ಮತ್ತೆ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಅಂಬೇಡ್ಕರ್ ವಸತಿ ಶಾಲೆ ಬಾಲಕರನ್ನು ಅದೇ ಗ್ರಾಮದ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಸ್ಥಳಾಂತರಿಸಲಾಗಿದೆ. ತರಗತಿಗಳನ್ನು ಸರ್ಕಾರಿ ಪ್ರೌಢಶಾಲೆಗೆ ಸ್ಥಳಾಂತರಿಸಲಾಗಿದೆ. ಎರಡೂ ಕಡೆಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಬಿಸಿನೀರಿನ ಸೌಲಭ್ಯಕ್ಕಾಗಿ ಹೆಚ್ಚುವರಿ ಸೋಲಾರ್ ಯಂತ್ರಗಳು, ಕುಡಿಯುವ ನೀರಿಗಾಗಿ ಹೆಚ್ಚುವರಿ ನೀರು ಶುದ್ಧೀಕರಣ ಯಂತ್ರ ಅಳವಡಿಸಲಾಗಿದೆ.

ADVERTISEMENT

ಪ್ರಾಚಾರ್ಯೆ ಅಮಾನತು

ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಅಂಬೇಡ್ಕರ್‌ ವಸತಿ ಶಾಲೆಯ ಪ್ರಾಚಾರ್ಯರಾದ ರೂಪಾ ಅವರನ್ನು ಸರ್ಕಾರವು ಅಮಾನತು ಮಾಡಿದೆ.

‘ಪ್ರಜಾವಾಣಿ’ ವರದಿ ಆಧರಿಸಿ ಈ ಕ್ರಮ ಕೈಗೊಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಮಕ್ಕಳ ಸಮಸ್ಯೆ ಬಗ್ಗೆ ಗೊತ್ತಿದ್ದೂ ಮಾಹಿತಿ ನೀಡದೇ ಇರುವುದು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದರೂ ಅವರ ವಾಸ್ತವ್ಯಕ್ಕೆ ಸೂಕ್ತ ಸ್ಥಳಾವಕಾಶ ಕಲ್ಪಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ರಾಘವೇಂದ್ರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.