
ರಾಮನಗರ: ನಗರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಶಾರದಾ ಚಾರಿಟೇಬಲ್ ಟ್ರಸ್ಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ(ಸಿಎಸ್ಆರ್ ಫಂಡ್) ನೀಡಿರುವ ಅತ್ಯಾಧುನಿಕ ಆಂಬ್ಯುಲೆನ್ಸ್ ಅನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಜಿಲ್ಲಾಸ್ಪತ್ರೆಗೆ ಇತ್ತೀಚೆಗೆ ಹಸ್ತಾಂತರಿಸಿದರು.
‘ಸಿಎಸ್ಆರ್ ಅನುದಾನದಲ್ಲಿ ರಾಮನಗರ ಜಿಲ್ಲಾಸ್ಪತ್ರೆಗೆ ಒಂದು ಆಂಬುಲೆನ್ಸ್ ಕೊಡುಗೆಯಾಗಿ ನೀಡುವಂತೆ ಟ್ರಸ್ಟ್ಗೆ ಮನವಿ ಮಾಡಿದ್ದೆ. ಅದಕ್ಕೆ ಟ್ರಸ್ಟ್ ಸ್ಪಂದಿಸಿದೆ. ಈ ಆಂಬುಲೆನ್ಸ್ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ತ್ವರಿತ ಹಾಗೂ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಸಹಾಯವಾಗಲಿದೆ’ ಎಂದು ಡಾ. ಮಂಜುನಾಥ್ ಹೇಳಿದರು.
ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗಬೇಕು. ಅದಕ್ಕಾಗಿ, ತ್ವರಿತವಾಗಿ ಆಸ್ಪತ್ರೆಗೆ ತರಲು ಆಂಬುಲೆನ್ಸ್ ವ್ಯವಸ್ಥೆ ಅಗತ್ಯ. ಅಪಘಾತಗಳಾದಾಗ ಗೋಲ್ಡನ್ ಅವರ್ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಬೇಕು. ಆಗ ಪ್ರಾಣಾಪಾಯದಿಂದ ಅವರನ್ನು ಪಾರು ಮಾಡಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಮಂಜುನಾಥ್, ಟ್ರಸ್ಟ್ ಉಪಾಧ್ಯಕ್ಷೆ ಎನ್.ಎಚ್. ಲಕ್ಷ್ಮಿ ನರಸು, ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ, ಗೌತಮ್ ಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.