ಚನ್ನಪಟ್ಟಣ: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರಕಿಸಲು ಒಕ್ಕಲಿಗರ ಸಾರ್ವಜನಿಕ ವಿದ್ಯಾಸಂಸ್ಥೆ ಶ್ರಮಿಸುತ್ತಿದೆ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಪ್ರಶಂಸಿಸಿದರು.
ನಗರದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆವರಣದಲ್ಲಿ ನಿರ್ಮಿಸಿರುವ ಐಟಿಐ ಕಾಲೇಜಿನ ನೂತನ ಕಟ್ಟಡ ವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂಬ ಸದುದ್ದೇಶ ದಿಂದ ಹಿರಿಯರು ಆರಂಭಿಸಿದ ಈ ಸಂಸ್ಥೆ ಇಂದು ಅಗಾಧವಾಗಿ ಬೆಳೆದಿದೆ ಎಂದು ಹೇಳಿದರು.
ಬಡವರು ಮತ್ತು ರೈತರ ಮಕ್ಕಳಿಗೆ ಹೊರೆಯಾಗದ ರೀತಿಯಲ್ಲಿ ಶುಲ್ಕ ಪಡೆಯುತ್ತಾ ಸಂಸ್ಥೆ ಉತ್ತಮ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ಆಡಳಿತ ಮಂಡಳಿ ಯಾವುದೇ ಸರ್ಕಾರವು ಸಹ ನಡೆಸದ ರೀತಿಯಲ್ಲಿ ಸಂಸ್ಥೆಯನ್ನು ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ. ಸಂಸ್ಥೆಯ ಈ ಶೈಕ್ಷಣಿಕ ಸೇವೆ ಇದೇ ರೀತಿಯಲ್ಲಿ ಮುಂದುವರಿಯಲಿ ಎಂದು ಹಾರೈಸಿದರು.
‘ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಿದ ನನಗೆ, ಸರ್ಕಾರ ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಿದರೆ ಸೂಕ್ತ ಎಂಬ ಅನುಭವವಾಗಿದೆ. ಶೈಕ್ಷಣಿಕ ಪ್ರಗತಿ, ಉದ್ಯೋಗ ಸೃಷ್ಟಿಗೆ ನನ್ನದೇ ಕಲ್ಪನೆಗಳನ್ನು ಇಟ್ಟುಕೊಂಡಿದ್ದೇನೆ. ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ದೊರತರೆ ಎಲ್ಲವನ್ನು ಕಾರ್ಯರೂಪಕ್ಕೆ ತರಲು ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಭಿವೃದ್ಧಿಗಾಗಿ ತಮ್ಮ ಶಾಸಕರ ನಿಧಿಯಿಂದ ₹ 5 ಲಕ್ಷ ಅನು ದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿಯಾಗಿ ₹ 15 ಲಕ್ಷ ಅನುದಾನ ನೀಡಲಾಗುವುದು ಎಂದರು.
ತಹಶೀಲ್ದಾರ್ ಹರ್ಷವರ್ಧನ್, ಪೌರಾಯುಕ್ತ ಶಿವನಂಕಾರಿಗೌಡ, ಒಕ್ಕಲಿಗರ ಸಾರ್ವಜನಿಕರ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಟಿ.ಕೆ. ಯೋಗೀಶ್, ಉಪಾಧ್ಯಕ್ಷ ಕೆಂಚೇಗೌಡ, ಕಾರ್ಯದರ್ಶಿ ಚನ್ನಪ್ಪ, ಖಜಾಂಚಿ ನಾರಾಯಣಗೌಡ, ಸಹ ಕಾರ್ಯದರ್ಶಿಗಳಾದ ವಿ.ಬಿ. ಚಂದ್ರು, ಮಹೇಶ್ವರ್, ಮೆಹರೀಶ್, ವೆಂಕಟರಾಮೇಗೌಡ, ಶಂಭೂಗೌಡ, ಸಿಂ.ಲಿಂ. ನಾಗರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.