ರಾಮನಗರ: ಬೆಂಗಳೂರು ಸಹಕಾರಿ ಹಾಲು ಒಕ್ಕೂಟದ ಆಡಳಿತ ಮಂಡಳಿಯ 13 ನಿರ್ದೇಶಕ ಸ್ಥಾನಗಳಿಗೆ ಇದೇ 12ರಂದು ಚುನಾವಣೆ ನಡೆಯಲಿದೆ. ಜಿಲ್ಲೆಯ ನಾಲ್ಕು ಕ್ಷೇತ್ರಗಳಿಂದ ಒಟ್ಟು 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ನಾಮಪತ್ರ ಹಿಂಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ಒಟ್ಟು 23 ಅಭ್ಯರ್ಥಿಗಳ ಪೈಕಿ 12 ಮಂದಿ ತಮ್ಮ ಉಮೇದುವಾರಿಕೆ ಹಿಂಪಡೆದರು. ಮಾಗಡಿ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದ ಎಚ್.ಎನ್. ಅಶೋಕ್ ನಾಮಪತ್ರ ತಿರಸ್ಕೃತಗೊಂಡಿತು. ಕನಕಪುರ ಕ್ಷೇತ್ರದಿಂದ ಎಚ್.ಪಿ.ರಾಜಕುಮಾರ್ ಈಗಾಗಲೇ ಅವಿರೋಧ ಆಯ್ಕೆ ಯಾಗಿದ್ದಾರೆ.
ಜಿಲ್ಲೆಯಲ್ಲಿ ರಾಮನಗರ ಕ್ಷೇತ್ರದಿಂದ 2 ಅಭ್ಯರ್ಥಿಗಳು, ಚನ್ನಪಟ್ಟಣ ಕ್ಷೇತ್ರದಿಂದ 2 ಅಭ್ಯರ್ಥಿಗಳು, ಮಾಗಡಿ ಕ್ಷೇತ್ರದಿಂದ 3 ಅಭ್ಯರ್ಥಿಗಳು, ಕುದೂರು ಕ್ಷೇತ್ರದಿಂದ 2 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ರಾಮನಗರ ಕ್ಷೇತ್ರದಿಂದ ಹಾಲಿ ನಿರ್ದೇಶಕ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಮತ್ತು ಎಂ.ಶಿವಲಿಂಗಪ್ಪ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಚನ್ನಪಟ್ಟಣ ಕ್ಷೇತ್ರದಿಂದ ಹಾಲಿ ನಿರ್ದೇಶಕ ಲಿಂಗೇಶ್ ಕುಮಾರ್ ಮತ್ತು ಜಯಮುತ್ತು ನಡುವೆ ನೇರ ಹಣಾಹಣಿ ಇದೆ.
ಮಾಗಡಿ ಕ್ಷೇತ್ರದಿಂದ ಹಾಲಿ ನಿರ್ದೇಶಕ ನರಸಿಂಹಮೂರ್ತಿ, ಕೃಷ್ಣಮೂರ್ತಿ, ಎನ್.ಮಂಜುನಾಥ್ ಕಣದಲ್ಲಿದ್ದಾರೆ. ಕುದೂರು ಕ್ಷೇತ್ರದಿಂದ ಮಂಜುನಾಥ್ ಮತ್ತು ರಾಜಣ್ಣ ನಡುವೆ ಸ್ಪರ್ಧೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.