ADVERTISEMENT

ಜಿಬಿಐಟಿ |ರೈತರಿಗೆ ಕಿರುಕುಳ: ಸರ್ಕಾರದ ಉದ್ದೇಶವಲ್ಲ– ಶಾಸಕ ಎಚ್.ಸಿ.ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2025, 2:13 IST
Last Updated 21 ಡಿಸೆಂಬರ್ 2025, 2:13 IST
ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆ ಮಾಡಿದರು. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಇತರರು ಹಾಜರಿದ್ದರು
ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆ ಮಾಡಿದರು. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಇತರರು ಹಾಜರಿದ್ದರು   

ರಾಮನಗರ: ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಅನುಷ್ಠಾನ ವಿಚಾರದಲ್ಲಿ ರೈತರಿಗೆ ತೊಂದರೆ ಕೊಡಬೇಕು ಎನ್ನುವ ದುರುದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.

ನಗರದಲ್ಲಿ ಶನಿವಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರೈತರ ಮಾಹಿತಿಗಾಗಿ ಹೊರ ತಂದಿರುವ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು.

ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆಯೇ ಹೊರತು; ಈ ಯೋಜನೆಯನ್ನು ಜಿದ್ದಿನ ಮೂಲಕ ಅನುಷ್ಠಾನ ಮಾಡಲು ಮುಂದಾಗುತ್ತಿಲ್ಲ. ಈ ವಿಷಯವನ್ನು ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು.

ADVERTISEMENT

2006ರಲ್ಲಿ ಈ ಯೋಜನೆಗೆ ಚಾಲನೆ ಸಿಕ್ಕಿತ್ತು. ಅಂದಿನ ಬಿಡದಿ ಟೌನ್ ಶಿಪ್ ಯೋಜನೆಗೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಎಂದು ಹೊಸ ರೂಪ ನೀಡಲಾಗಿದೆ. ರೈತರು ವಸ್ತುಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಈ ಯೋಜನೆಯಲ್ಲಿ ಯಾವುದೇ ರೀತಿಯ ಮದ್ಯವರ್ತಿಗಳಿಲ್ಲ. ರೈತರಿಗೆ ಸಂದೇಹಗಳಿದ್ದರೆ ಸಹಾಯವಾಣಿ ಸಂಖ್ಯೆ 7259198192 ಸಂಪರ್ಕಿಸಬಹುದು. ಅಧಿಕಾರಿಗಳು ನೇರವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.

ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಮುಂದಿನ ದಿನಗಳಲ್ಲಿ ಪ್ರತಿ ತಿಂಗಳಿಗೊಮ್ಮೆ ಸಭೆ ಮಾಡಲಾಗುವುದು. ರೈತರು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಅರ್ಜಿ ನೀಡಿದರೆ ಅದನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಸೂಚಿಸಲಾಗುವುದು. ಯೋಜನೆ ವಿರೋಧಿಸಿ ಬಿಡದಿ ಸಮೀಪದ ಬೈರಮಂಗಲದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶೀಘ್ರವೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಬಗ್ಗೆ ರೈತರು ಸಮರ್ಪಕವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಧಿಕಾರದ ಹೆಚ್ಚುವರಿ ಆಯುಕ್ತ ಮಾರುತಿ ಪ್ರಸನ್ನ, ಪ್ರಾಧಿಕಾರದ ನಿರ್ದೇಶಕರು, ರೈತರು ಭಾಗವಹಿಸಿದ್ದರು.

ಮುಖ್ಯಮಂತ್ರಿ ವಿಚಾರಕ್ಕೆ ಶೀಘ್ರ ಪರಿಹಾರ
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಶೀಘ್ರವೇ ಪರಿಹಾರ ಸೂಚಿಸಲಿದೆ ಎಂದು ಬಾಲಕೃಷ್ಣ ತಿಳಿಸಿದರು.ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅನಗತ್ಯವಾಗಿ ಮಾತನಾಡಿ ಗೊಂದಲ ಸೃಷ್ಟಿಸುವವರ ವಿರುದ್ಧವೂ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.  ಡಿನ್ನರ್ ಪಾರ್ಟಿ ಹೆಸರಿನಲ್ಲಿ ಯಾರೂ ರಾಜಕೀಯ ಮಾಡುತ್ತಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ. ಡಿನ್ನರ್ ಪಾರ್ಟಿಗೆ ಕರೆದಿದ್ದರು. ಕಾರಣಾಂತರದಿಂದ ಹೋಗಿಲ್ಲ. ಡಿನ್ನರ್ ಪಾರ್ಟಿ ಯಾರು ಮಾಡಿದರೆ ನಮಗೇನು. ಊಟಕ್ಕೆ ಕರೆದಿದ್ದಾರೆ ಅಷ್ಟೇ ಎಂದರು.‌ ಎಚ್.ಡಿ.ಕುಮಾರಸ್ವಾಮಿ ಮಾಗಡಿಗೆ ಹೇಮಾವತಿ ನೀರು ಬರುವುದಿಲ್ಲ. ಇದೊಂದು ಬೋಗಸ್ ಸ್ಕೀಂ ಎಂದಿದ್ದರು. ಅವರು ಸುಳ್ಳು ರಾಜಕಾರಣ ಬಿಡಬೇಕು. ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಇದ್ದಾಗ ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.   ಕುಮಾರಸ್ವಾಮಿ ಮಂಡ್ಯದಲ್ಲಿ 100 ಎಕರೆ ಜಾಗ ಕೊಟ್ಟರೆ ಕೈಗಾರಿಕೆ ತರುವುದಾಗಿ ಹೇಳಿದ್ದಾರೆ. ಮನಸ್ಸು ಮಾಡಿದರೆ ಅವರೇ ಸ್ವಂತ ಹಣದಲ್ಲಿ 100ಎಕರೆ ಜಾಗ ಖರೀದಿ ಮಾಡಿ ಕೈಗಾರಿಕೆಗಳನ್ನು ಸ್ಥಾಪಿಸಬಹುದು ಎಂದರು.

ಯುವಕ–ಯುವತಿಯರಿಗೆ ಕೌಶಲ ತರಬೇತಿ

ನಿರುದ್ಯೋಗಿ ಯುವಕ ಯುವತಿಯರಿಗೆ ಕೌಶಲ ತರಬೇತಿ ನೀಡಿ ಉದ್ಯೋಗ ಕೊಡಿಸಲಾಗುವುದು ಎಂದು ಬಾಲಕೃಷ್ಣ ಭರವಸೆ ನೀಡಿದರು. ಕೌಶಲ ಮತ್ತು ಉದ್ಯೋಗ ಕೇಂದ್ರ ತೆರೆಯಲು ಈಗಾಗಲೇ ಜಾಗ ಗುರುತಿಸಲಾಗಿದೆ. ಜೋಗರದೊಡ್ಡಿಯಲ್ಲಿ ನಿರ್ಮಿತಿ ಕೇಂದ್ರದವರು ಜಾಗ ನೀಡಿದ್ದಾರೆ. ಶೀಘ್ರವೇ ಅಲ್ಲಿ ತರಬೇತಿ ಕೇಂದ್ರ ಪ್ರಾರಂಭವಾಗಲಿದೆ. ಯುವಕ–ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ನೀಡಿದ ನಂತರ ಬಿಡದಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಉದ್ಯೋಗ ಕೊಡಿಸುವ ಕೆಲಸ ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.