ADVERTISEMENT

ಚನ್ನಪಟ್ಟಣ: ಬಿಜೆಪಿ ಬಲವರ್ಧನೆಗೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 3:51 IST
Last Updated 25 ಜುಲೈ 2021, 3:51 IST
ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ತಾಲ್ಲೂಕು ಕಾರ್ಯಕಾರಿಣಿಯಲ್ಲಿ ಪಕ್ಷದಿಂದ ಗೆದ್ದ ನಗರಸಭಾ ಸದಸ್ಯರನ್ನು ಅಭಿನಂದಿಸಲಾಯಿತು
ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ ತಾಲ್ಲೂಕು ಕಾರ್ಯಕಾರಿಣಿಯಲ್ಲಿ ಪಕ್ಷದಿಂದ ಗೆದ್ದ ನಗರಸಭಾ ಸದಸ್ಯರನ್ನು ಅಭಿನಂದಿಸಲಾಯಿತು   

ಚನ್ನಪಟ್ಟಣ: ‘ಪಕ್ಷವು ನನಗೆ ಹೆಚ್ಚಿನ ಶಕ್ತಿ ನೀಡಿದರೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸಲು ಸಂಪೂರ್ಣ ಶ್ರಮ ಹಾಕಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ನಡೆದ ಬಿಜೆಪಿ ತಾಲ್ಲೂಕು ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

ಹಳೇ ಮೈಸೂರು ಭಾಗದಲ್ಲಿ ಬಿಜೆಪಿಯನ್ನು ಸದೃಢಗೊಳಿಸಬೇಕು. ಈ ಭಾಗದಲ್ಲೂ ರಾಜಕೀಯ ಪರಿವರ್ತನೆಯಾಗಬೇಕು ಎಂಬುದು ನನ್ನ ಬಯಕೆ. ಇದಕ್ಕೆ ಮುಂದಿನ ದಿನಗಳಲ್ಲಿ ವರಿಷ್ಠರು ಅವಕಾಶ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.

ADVERTISEMENT

ಕಳೆದ ನಗರಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ 20 ವಾರ್ಡ್‌ಗಳಲ್ಲಿ ಸ್ಪರ್ಧೆ ಮಾಡಲಾಗಿತ್ತು. ಇದರಲ್ಲಿ 7 ವಾರ್ಡ್‌ಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಮತ ವಿಭಜನೆಯಿಂದಾಗಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಕಾರ್ಯಕರ್ತರು ಚಿಂತಿಸುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಒತ್ತು ನೀಡೋಣ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಎದುರಾಗಲಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾರ್ಯಕರ್ತರು ಕೆಲಸ ಮಾಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.

ದೇಶದ ಇತರೇ ರಾಜಕೀಯ ಪಕ್ಷಗಳಿಗಿಂತ ಬಿಜೆಪಿ ವಿಭಿನ್ನ ಎನಿಸಿಕೊಂಡಿರುವುದು ಪಕ್ಷದಲ್ಲಿನ ಶಿಸ್ತು ಮತ್ತು ಸಂಘಟನಾತ್ಮಕ ಕೆಲಸದಿಂದ. ಪಕ್ಷ ಮತ್ತು ಸರ್ಕಾರವನ್ನು ಒಂದೇ ವೇದಿಕೆಯಲ್ಲಿ ಸರಿದೂಗಿಸಿಕೊಂಡು ಹೋಗುವ ರಾಜಕೀಯ ವ್ಯವಸ್ಥೆ ಬೇರೆ ಪಕ್ಷಗಳಲ್ಲಿ ಇಲ್ಲ. ಆದರೆ, ಬಿಜೆಪಿಯು ಪ್ರತಿಯೊಂದು ಬೆಳವಣಿಗೆಯನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ಕಾರಣಕ್ಕಾಗಿ ನಮ್ಮ ಕಾರ್ಯಕಾರಿಣಿಗೆ ಸಾಕಷ್ಟು ಮಹತ್ವವಿದೆ ಎಂದರು.

‘ಕಾರ್ಯಕರ್ತರು ಪಕ್ಷ ಸಂಘಟನೆಯನ್ನು ಬಲಗೊಳಿಸುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿಯಿಂದ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಯಮಾಲ, ಸುಮಾ ರವೀಶ್, ಕೋಟೆ ಚಂದ್ರಶೇಖರ್, ಮನೋಹರ್, ಕಸ್ತೂರಿ ಮಂಜುನಾಥ್, ಮಂಗಳಮ್ಮ ಅವರನ್ನು ಅಭಿನಂದಿಸಲಾಯಿತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವಾರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ. ಜಯರಾಮು, ನಗರ ಘಟಕದ ಅಧ್ಯಕ್ಷ ಶಿವಕುಮಾರ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ. ಮಲುವೇಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್, ಪದಾಧಿಕಾರಿಗಳಾದ ಶಿವಲಿಂಗಯ್ಯ, ಹುಣಸನಹಳ್ಳಿ ಕೃಷ್ಣಪ್ಪ, ಎಲೇಕೇರಿ ರವೀಶ್, ಜೆ. ಬ್ಯಾಡರಹಳ್ಳಿ ರಾಮಚಂದ್ರು, ಸದಾನಂದ, ಆನಂದಸ್ವಾಮಿ, ವಿಷಕಂಠು, ಯುವ ಘಟಕದ ಅಧ್ಯಕ್ಷರಾದ ಶಿವಕುಮಾರ್ ನಾಗವಾರ, ಚೇತನ್, ಮಹಿಳಾ ಘಟಕದ ಅಧ್ಯಕ್ಷೆ ಮೈತ್ರಿಗೌಡ, ಪ್ರಧಾನ ಕಾರ್ಯದರ್ಶಿ ಹಾರೋಕೊಪ್ಪ ಪ್ರೇಮ್ ಕುಮಾರ್, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಗರಕಹಳ್ಳಿ ಸಿದ್ದಪ್ಪಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.