ರಾಮನಗರ: ಸಂವಿಧಾನದ 370ನೇ ವಿಧಿ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಲು ಕೇಂದ್ರ ಸರ್ಕಾರ ಕೈಗೊಂಡ ನಿರ್ಣಯಕ್ಕೆ ಹರ್ಷ ವ್ಯಕ್ತಪಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಇಲ್ಲಿನ ಐಜೂರು ವೃತ್ತದಲ್ಲಿ ಸಂಭ್ರಮಿಸಿದರು.
ಐಜೂರು ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿದರು. ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗಿದರು. ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಐತಿಹಾಸಿಕವಾಗಿದೆ. ಈಗ ಕಾಶ್ಮೀರವೂ ದೇಶದ ಎಲ್ಲ ರಾಜ್ಯಗಳಂತೆ ಒಂದಾಗಿದೆ. ಹಿಂದಿನ ಯಾವ ಸರ್ಕಾರಗಳೂ ಕೈಗೊಳ್ಳದ ನಿರ್ಣಯವನ್ನು ಮೋದಿ ಸರ್ಕಾರ ಮಾಡಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.
ಕಳೆದ ಹಲವು ವರ್ಷಗಳಿಂದಲೂ 370ನೇ ವಿಧಿ ರದ್ಧತಿಯ ಕುರಿತು ವ್ಯಾಪಕ ಚರ್ಚೆ ಆಗುತ್ತಿತ್ತು. ಬಿಜೆಪಿ ಚುನಾವಣೆಗೆ ಮುಂಚೆಯೇ ಈ ಕುರಿತು ಭರವಸೆ ನೀಡಿತ್ತು. ಅಂತೆಯೇ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ ಎಂದರು.
ಸಂಭ್ರಮಾಚರಣೆ ಬಳಿಕ ಬಿಜೆಪಿ ಕಾರ್ಯಕರ್ತರು, ನಗರದ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿದರು. ಬಿಜೆಪಿ ಕಾರ್ಯಕರ್ತರಾದ ವಿನೋದ್ ಭಗತ್, ರಮೇಶ್ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.