ರಾಮನಗರ: ವೇಗವಾಗಿ ಬಂದ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರರೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಗರದ ಹೊರವಲಯದ ಕುಂಬಾಪುರ ಗೇಟ್ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬುಧವಾರ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಲೀಲಾವತಿ ಬಡಾವಣೆಯ ಸಕ್ಲೇನ್ ಪಾಷ (28) ಮೃತ ಬೈಕ್ ಸವಾರ. ಚನ್ನಪಟ್ಟಣ ತಾಲ್ಲೂಕಿನ ಮಳೂರಿನ ಹೊಂಬಾಳಯ್ಯ ಎಂಬುವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಬೆಂಗಳೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಇನ್ನೋವಾ ಕಾರಿನ ಚಾಲಕ, ಕುಂಬಾಪುರ ಕೊಳಚೆ ನೀರು ಸಂಸ್ಕರಣ ಘಟಕದ (ಎಸ್ಟಿಪಿ) ಬಳಿಯ ಹೆದ್ದಾರಿ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು, ರಸ್ತೆ ವಿಭಜಕಕ್ಕೆ ಹತ್ತಿಸಿದ್ದಾನೆ. ಪಕ್ಕದ ರಸ್ತೆಗೆ ಹಾರಿದ ಕಾರು, ಮೈಸೂರು ಕಡೆಗೆ ಹೋಗುತ್ತಿದ್ದ ಸಕ್ಲೇನ್ ಪಾಷ ಮತ್ತು ಹೊಂಬಾಳಯ್ಯ ಅವರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ಹೇಳಿದರು.
ಬಳಿಕ ರಸ್ತೆಯಂಚಿನ ಕಬ್ಬಿಣದ ಬ್ಯಾರಿಕೇಡ್ಗೆ ಡಿಕ್ಕಿಯಾಗಿ ನಿಂತಿದೆ. ಡಿಕ್ಕಿಯ ತೀವ್ರತೆಗೆ ಸಕ್ಲೇನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಗಾಯಗೊಂಡ ಹೊಂಬಾಳಯ್ಯ ಅವರನ್ನು ಸ್ಥಳೀಯರು ಆರೈಕೆ ಮಾಡಿ, ಆಸ್ಪತ್ರೆಗೆ ಸಾಗಿಸಿದರು. ಘಟನೆಯಲ್ಲಿ ಕಾರು ಮತ್ತು ಬೈಕ್ಗಳು ಜಖಂಗೊಂಡಿವೆ. ಘಟನೆ ಕುರಿತು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.