ಚನ್ನಪಟ್ಟಣ: ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಕೂಡಲೇ ಪರಿಹರಿಸಬೇಕು ಎಂದು ಒತ್ತಾಯಿಸಿ ಶಿಕ್ಷಕರು, ವಿದ್ಯಾರ್ಥಿಗಳು, ಎಸ್ಡಿಎಂಸಿ ಸದಸ್ಯರು ಶುಕ್ರವಾರ ಮತ್ತೀಕೆರೆ ಗ್ರಾ.ಪಂ. ಕಚೇರಿ ಎದುರು ತಟ್ಟೆ, ಲೋಟ ಹಿಡಿದು ಪ್ರತಿಭಟನೆ ನಡೆಸಿದರು.
ಶಾಲೆಯಲ್ಲಿ 167 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಮೂರು ತಿಂಗಳುಗಳಿಂದ ಕುಡಿಯುವ ನೀರು ಸೇರಿದಂತೆ ನಿತ್ಯಬಳಕೆಗೆ ನೀರಿನ ವ್ಯವಸ್ಥೆ ಇಲ್ಲ. ಇದರಿಂದ ಕುಡಿಯಲು, ಅಡುಗೆ ತಯಾರಿಕೆ ಸೇರಿದಂತೆ ಇತರೆ ಬಳಕೆಗೆ ನೀರಿಲ್ಲದೆ ವಿದ್ಯಾರ್ಥಿಗಳು, ಶಿಕ್ಷಕರು ಪರಿತಪಿಸುವಂತಾಗಿದೆ ಎಂದು ಆರೋಪಿಸಿದರು.
ನೀರನ್ನು ಗ್ರಾಮದ ಅಕ್ಕಪಕ್ಕದ ಬೀದಿಗಳಲ್ಲಿ ತರುವಂತಾಗಿದೆ. ಜೊತೆಗೆ, ಶಿಕ್ಷಕರು, ವಿದ್ಯಾರ್ಥಿಗಳ ಶೌಚಾಲಯಕ್ಕೂ ನೀರು ಇಲ್ಲದಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಸ್ಥಳೀಯ ಗ್ರಾ.ಪಂ.ಗೆ ಲಿಖಿತವಾಗಿ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಗ್ರಾಮದಲ್ಲಿ ಜಲಮಿಷನ್ ಯೋಜನೆ ಕಾಮಗಾರಿ ವೇಳೆ ಶಾಲೆಗೆ ನೀರು ಪೂರೈಕೆ ಮಾಡುತ್ತಿದ್ದ ಪೈಪ್ ಒಡೆದು ಈ ಅವಾಂತರ ಸೃಷ್ಟಿಯಾಗಿದೆ. ಗುತ್ತಿಗೆದಾರರು ಒಡೆದು ಹೋದ ಪೈಪ್ ಅನ್ನು ಸರಿಪಡಿಸಿಲ್ಲ. ಅಂದಿನಿಂದ ಆರಂಭವಾದ ನೀರಿನ ಸಮಸ್ಯೆ ಇಂದಿಗೂ ಸರಿಹೋಗಿಲ್ಲ. ಈ ಬಗ್ಗೆ ಗ್ರಾ.ಪಂ. ಅಧಿಕಾರಿಗಳ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಗ್ರಾ.ಪಂ. ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರವೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸಬೇಕು. ವಿದ್ಯಾರ್ಥಿಗಳು, ಶಿಕ್ಷಕರಿಗೆ ಎದುರಾಗಿರುವ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪಿಡಿಒ, ಜನಪ್ರತಿನಿಧಿಗಳು ಶೀಘ್ರವೇ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು. ಬಳಿಕ ತಾ.ಪಂ. ಇಒ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಾಲೆಯ ಮುಖ್ಯಶಿಕ್ಷಕ ಕರಿಯಪ್ಪ, ಎಸ್ಡಿಎಂಸಿ ಅಧ್ಯಕ್ಷೆ ನಾಗರತ್ನಮ್ಮ, ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.