ಚನ್ನಪಟ್ಟಣ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಿರಿಯ ವಕೀಲ ಸದಾಶಿವರೆಡ್ಡಿ ಅವರ ಮೇಲೆಯಾಗಿರುವ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿಪತ್ರ ಸಲ್ಲಿಸಿದರು
ಚನ್ನಪಟ್ಟಣ: ಹಿರಿಯ ವಕೀಲ ಸದಾಶಿವರೆಡ್ಡಿ ಅವರ ಮೇಲಾಗಿರುವ ಮಾರಣಾಂತಿಕ ಹಲ್ಲೆ ಖಂಡಿಸಿ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸೋಮವಾರ ಬಲಗೈಗೆ ಕೆಂಪುಪಟ್ಟಿ ಧರಿಸಿಕೊಂಡು ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದ ವಕೀಲರು ನ್ಯಾಯಾಲಯದ ಆವರಣದಿಂದ ಹೊರಟು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮೌನ ಮೆರವಣಿಗೆ ನಡೆಸಿ ನಂತರ ತಾಲ್ಲೂಕು ಕಚೇರಿ ತಲುಪಿ ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿಪತ್ರ ಸಲ್ಲಿಸಿದರು.
ವಕೀಲರ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿವೆ. ಸರ್ಕಾರವು ವಕೀಲರ ರಕ್ಷಣೆ ಕಾಯ್ದೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಹಿರಿಯ ವಕೀಲರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಧನಂಜಯ, ಕಾರ್ಯದರ್ಶಿ ದೇವರಾಜು, ಖಜಾಂಚಿ ಹೇಮಂತ್, ಸದಸ್ಯರಾದ ಶಿವಶಂಕರ್, ಕೃಷ್ಣಪ್ಪ, ಲಕ್ಷ್ಮಿನಾರಾಯಣಸ್ವಾಮಿ, ಶಿವು, ಶ್ರೀಧರ್, ಸುರೇಶ್, ಲೋಕೇಶ್, ಹ್ಯಾರಿಸ್ ಖಾನ್, ರವಿ, ಕೆಂಪರಾಜು, ಗಂಗಾಧರ್, ಶಶಿಕುಮಾರ್, ಸೌಮ್ಯ, ಪ್ರಭಾವತಿ, ಅನುಶ್ರೀ, ಅಶ್ವಿನಿ, ಶಶಿಕಲಾ, ದೀಪಾ, ಸರಿತಾ, ನಂದಿನಿ, ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.