ಚನ್ನಪಟ್ಟಣ: ಇಲ್ಲಿನ ನಗರಸಭೆಯಲ್ಲಿ ಅಕ್ರಮ ಖಾತೆಗಳು ನಡೆಯುತ್ತಿವೆ ಎಂಬ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಬುಧವಾರ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.
ನಗರಸಭೆಯಲ್ಲಿ ಪೌರಾಯುಕ್ತರು ಸೇರಿದಂತೆ ಇತರೆ ಅಧಿಕಾರಿಗಳು, ನೌಕರರು ಅಕ್ರಮ ಖಾತೆಗಳನ್ನು ಮಾಡುತ್ತಿದ್ದಾರೆ, ಕೆಲವು ನಕಲಿ ಖಾತೆಗಳು ನಡೆಯುತ್ತಿವೆ, ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್, ಸದಸ್ಯರಾದ ಅಬಿದಾಬಾನು, ಕೆ.ಮಂಜುನಾಥ್, ವಾಸಿಲ್ ಆಲಿಖಾನ್, ಸಾರ್ವಜನಿಕರು ಸೇರಿದಂತೆ ಹಲವರು ಜಿಲ್ಲಾಧಿಕಾರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ 7 ಮಂದಿಯ ಸಮಿತಿ ರಚಿಸಿದ್ದು, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಸಮಿತಿಯಲ್ಲಿ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ, ರಾಮನಗರ ನಗರಸಭೆಯ ಕಂದಾಯಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಚೇರಿ ವ್ಯವಸ್ಥಾಪಕ ಸೇರಿದಂತೆ ಏಳು ಮಂದಿ ಇದ್ದಾರೆ. ಫೆ. 8ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ನಗರಸಭಾ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು ನೀಡಿರುವ ದೂರಿನಲ್ಲಿ ಪ್ರಸ್ತಾಪವಾಗಿರುವ ಪ್ರತಿವಿಷಯಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಪರಿಶೀಲನೆ ನಡೆಸಿ, ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿರುವ ಹಾಗೂ ಪಂಚಾಯಿತಿಯಿಂದ ನಗರಸಭೆಗೆ ಹಸ್ತಾಂತರವಾದ ಅನಧಿಕೃತ ಸ್ವತ್ತುಗಳ ಬಗ್ಗೆ, ನಗರಸಭೆಯ ಅನಧಿಕೃತ ಸ್ವತ್ತುಗಳಿಗೆ ಮತ್ತು ಖಾಲಿ ನಿವೇಶನಗಳಿಗೆ ಇ ಆಸ್ತಿ ತಂತ್ರಾಂಶದಲ್ಲಿ ಅಧಿಕೃತ ಸ್ವತ್ತು ಎಂದು ನೀಡಿರುವ ಪ್ರಕರಣಗಳು ಹಾಗೂ ಇತರೆ ದೂರುಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಆದೇಶದ ಪ್ರತಿಯಲ್ಲಿ ಸಮಿತಿಗೆ ಸೂಚನೆ ನೀಡಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.