ADVERTISEMENT

ಚನ್ನಪಟ್ಟಣ|ಚಿನ್ನದ ಸರ ಅಪಹರಣ ಪ್ರಕರಣ:ಇಬ್ಬರು ಅಂತರರಾಜ್ಯ ಕಳ್ಳರು ಸೇರಿ ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 5:29 IST
Last Updated 18 ಫೆಬ್ರುವರಿ 2026, 5:29 IST
ಆರೋಪಿಗಳಿಂದ ವಶಪಡಿಸಿಕೊಂಡ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ನೊಂದಿಗೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು
ಆರೋಪಿಗಳಿಂದ ವಶಪಡಿಸಿಕೊಂಡ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ನೊಂದಿಗೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು   

ಚನ್ನಪಟ್ಟಣ: ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಂತರರಾಜ್ಯ ಕಳ್ಳರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ನಗರದ ಅಪ್ಪಗೆರೆಯ ನಿವಾಸಿ ಕೌಶಲ್ಯ ಅಂಗಡಿಗೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಸಿಗರೇಟ್ ಕೇಳುವ ನೆಪದಲ್ಲಿ ಕೌಶಲ್ಯ ಕುತ್ತಿಗೆಯಲ್ಲಿದ್ದ 30 ಗ್ರಾಂ ಚಿನ್ನದ ಮಾಂಗಲ್ಯಸರ ಕಿತ್ತು ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಾಗಿತ್ತು.

ಮಾಹಿತಿ ಕಲೆಹಾಕಿದ ಪೊಲೀಸರು ಅಂತರರಾಜ್ಯ ಕಳ್ಳರಾದ ಮುಂಬೈನ ಕೌಸಾದ ನಿವಾಸಿ ಹೈದರ್ ಅಲಿ ಸರ್ಪರಾಜ್ (33), ಉತ್ತರಪ್ರದೇಶದ ಆಗ್ರಾ ಬಾನಾಪುರ ನಿವಾಸಿ ಇಮ್ರಾನ್ ನಖ್ವಿ (32) ಹಾಗೂ ಇವರಿಗೆ ಆಶ್ರಯ ನೀಡಿದ್ದ ತುಮಕೂರು ಜಿಲ್ಲೆ ತಿಪಟೂರು ನಗರದ ಆಲಿಬಾಬಾ (50) ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ₹4.20 ಲಕ್ಷ ಮೌಲ್ಯದ ಮಾಂಗಲ್ಯಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಹದೇಶ್ವರನಗರದ ರತ್ನಮ್ಮ ಅವರು ತಾಲ್ಲೂಕಿನ ಕೆಂಗಲ್ ಆಂಜನೇಯ ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ಬರಲು ದೇವಸ್ಥಾನದ ಮುಂಭಾಗ ಬರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ರತ್ನಮ್ಮ ಅವರ ಕುತ್ತಿಗೆಯಲ್ಲಿದ್ದ ಸುಮಾರು 44 ಗ್ರಾಂ ಚಿನ್ನದ ಮಾಂಗಲ್ಯಸರ ಎಗರಿಸಿ ಪರಾರಿಯಾಗಿದ್ದರು. ಈ ಸಂಬಂಧ ರತ್ನಮ್ಮ ದೂರು ದಾಖಲಿಸಿದ್ದರು.

ADVERTISEMENT

ಮಾಹಿತಿ ಕಲೆಹಾಕಿದ ಪೊಲೀಸರು ಚನ್ನಪಟ್ಟಣ ತಾಲ್ಲೂಕಿನ ಕೋಲೂರು ಗ್ರಾಮದ ಕೆ.ಎಂ. ಕಾರ್ತಿಕ್ (29) ಹಾಗೂ ರಾಮನಗರ ರಾಯರದೊಡ್ಡಿಯ ಡಿ.ಆರ್. ಸಚಿನ್ (29) ಎಂಬುವರನ್ನು ಬಂಧಿಸಿದ್ದಾರೆ.

ಇವರಲ್ಲಿ ಕಾರ್ತಿಕ್ ಎಂಬಾತ ಮದ್ದೂರು ಪೊಲೀಸ್ ಠಾಣೆ, ಐಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಕಳ್ಳತನದಲ್ಲಿ ಭಾಗಿಯಾಗಿದ್ದ ವಿಚಾರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಬಂಧಿತರಿಂದ ₹16.80 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.