ಕನಕಪುರ:ನಗರಸಭೆಯಲ್ಲಿ ಕಾಂಗ್ರೆಸ್ ತನ್ನ ಭದ್ರಕೋಟೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೆಡಿಎಸ್ 4 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಬಿಜೆಪಿ ಮೊದಲ ಬಾರಿ ಒಂದು ಸ್ಥಾನ ಗೆಲ್ಲುವ ಮೂಲಕ ಖಾತೆ ತೆರೆದಿದೆ.
ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿದ ಮೇಲೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದೆ. ನಗರಸಭೆಯಲ್ಲಿ ಒಟ್ಟು 31 ಸ್ಥಾನಗಳಿದ್ದು ಅದರಲ್ಲಿ 7 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್ಗೆ 20 ಸ್ಥಾನ ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ 20 ವಾರ್ಡ್ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿ 24 ವಾರ್ಡ್ಗಳಲ್ಲಿ ಸ್ಪರ್ಧೆ ಒಡ್ಡಿತ್ತು.
ವಿಜಯೋತ್ಸವ: ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡ್ಗಳಿಗೆ ತೆರಳಿ ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ವಿಜಯೋತ್ಸವ ಆಚರಿಸಿದರು. ದೇವಾಲಯಗಳಿಗೆ ತೆರಳಿ ಪೂಜೆ ನೆರವೇರಿಸಿದರು. ನಂತರ ಮತದಾರರ ಮನೆಗಳಿಗೆ ಭೇಟಿ ನೀಡಿ ಸಿಹಿ ವಿತರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಕ್ಷದ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.
‘ನಮ್ಮ ಪಕ್ಷವು ಇಲ್ಲಿ ನಿಧಾನವಾಗಿ ಸಂಘಟನೆ ಆಗುತ್ತಿದೆ. ಅದರ ಪ್ರತಿಫಲವೇ ಇಂದು ನಗರಸಭೆಯಲ್ಲಿ 1 ಸ್ಥಾನದಲ್ಲಿ ಗೆದ್ದಿದ್ದೇವೆ, 3 ಸ್ಥಾನಗಳಲ್ಲಿ ಗೆಲುವಿನ ಸಮೀಪದಲ್ಲಿದ್ದೇವೆ’ ಎಂದರು.
‘ಕನಕಪುರದಲ್ಲಿ ಜೆಡಿಎಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಪಕ್ಷವು ತನ್ನ ಸ್ವಾಭಿಮಾನವನ್ನು ಕಾಂಗ್ರೆಸ್ಗೆ ಮಾರಿಕೊಂಡು ದಯನೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಗೆ ಮಂಡಿಯೂರಿ 4 ಸ್ಥಾನಗಳನ್ನು ಪಡೆದಿರುವುದು ಮತ್ತು ಉಳಿದ ಸ್ಥಾನಗಳಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಪಕ್ಷದ ವಸ್ತುಸ್ಥಿತಿಯನ್ನು ತೋರುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.