ಚನ್ನಪಟ್ಟಣ: ‘ಮುಂಬರುವ ಲೋಕಸಭಾ ಚುನಾವಣೆಗೂ ಮೊದಲು ಬಿಜೆಪಿ ಜೆಡಿಎಸ್ ಮೈತ್ರಿಗೆ ಪೂರ್ವಸಿದ್ಧತಾ ಪರೀಕ್ಷೆಯಾಗಿ ವಿಧಾನ ಪರಿಷತ್ ಉಪ ಚುನಾವಣೆ ಬಂದಿದ್ದು, ಈ ಚುನಾವಣೆ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದರು.
ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದ ರಂಗನಾಥ್ ಅವರು ಈ ಬಾರಿ ಗೆಲ್ಲುವುದು ನಿಶ್ಚಿತ. ಶಿಕ್ಷಕರ ಒಲವು ರಂಗನಾಥ್ ಮೇಲಿದೆ’ ಎಂದರು.
‘ತಾಲ್ಲೂಕಿನಲ್ಲಿ 780 ಶಿಕ್ಷಕ ಮತದಾರರು ಇದ್ದು, ಪ್ರತಿಯೊಬ್ಬರನ್ನು ನಾನೇ ಖುದ್ದಾಗಿ ದೂರವಾಣಿ ಮೂಲಕ ಸಂಪರ್ಕಿಸಿ ರಂಗನಾಥ್ ಅವರಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತೇನೆ. ಪುಟ್ಟಣ್ಣ ಅವರು ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆಗೆ ಹೋಗಿದ್ದರು. ಅಲ್ಲಿ ಸೋತ ನಂತರ ಮತ್ತೆ ಶಿಕ್ಷಕರನ್ನೇ ಹುಡುಕಿಕೊಂಡು ಬಂದಿದ್ದಾರೆ’ ಎಂದು ಟೀಕಿಸಿದರು.
ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಮಾತನಾಡಿ, ‘ಕೊರೊನಾ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರ ಸಮಸ್ಯೆಗಳಿಗೆ ಪುಟ್ಟಣ್ಣ ಸ್ಪಂದಿಸಿಲ್ಲ. ಬಿಜೆಪಿ ಸರ್ಕಾರದ ಮುಂದೆ ಪುಟ್ಟಣ್ಣ ಶಿಕ್ಷಕರ ಸಮಸ್ಯೆ ಹೇಳಿಕೊಂಡಿಲ್ಲ. ಶಿಕ್ಷಕರು ಕೊಟ್ಟಿದ್ದ ಅಧಿಕಾರವನ್ನು ಬಿಟ್ಟು ಹೆಚ್ಚಿನ ಅಧಿಕಾರ ಪಡೆಯಲು ಶಾಸಕರಾಗಲು ಪುಟ್ಟಣ್ಣ ಹೊರಟಿದ್ದರು. ಆದರೆ, ಅಲ್ಲಿ ಸಫಲವಾಗಲಿಲ್ಲ. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪ ಚುನಾವಣೆ ತಂದಿರುವ ಅವರನ್ನು ಶಿಕ್ಷಕ ವರ್ಗ ತಿರಸ್ಕರಿಸಬೇಕು’ ಎಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆನಂದಸ್ವಾಮಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಪ್ರಕಾಶ್ ಇತರರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.