ಕನಕಪುರ: ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸಮತಾ ಸೈನಿಕ ದಳದ ಪದಾಧಿಕಾರಿಗಳು ಪಟ್ಟಣ ಪಂಚಾಯಿತಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಅಲ್ಲದೆ, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸದ ಅಧಿಕಾರಿಗಳು, ಇ-ಖಾತಾ ಅಕ್ರಮದಲ್ಲಿ ತೊಡಗಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.
ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾ ಖಜಾಂಚಿ ರುದ್ರೇಶ್
ನೇತೃತ್ವದಲ್ಲಿ ಪದಾಧಿಕಾರಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನವೀನ್ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.
ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಕೋಟೆ ಕುಮಾರ್ ಮಾತನಾಡಿ, ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿ ವರ್ಷವೇ ಕಳೆದಿದೆ. ತಾಲ್ಲೂಕು ಕೇಂದ್ರವಾಗಿದ್ದರೂ, ಇನ್ನೂ ಇಲ್ಲಿ ಮೂಲ ಸೌಕರ್ಯ ಲಭ್ಯವಾಗುತ್ತಿಲ್ಲ ಎಂದು ಆಕ್ರೋಶ
ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯಿತಿಯಲ್ಲಿ ನಿವೇಶನದ ಖಾತೆ ಮಾಡಿಸಿಕೊಳ್ಳಲು ಜನ ಸಾಮಾನ್ಯರಿಗೆ ಆಗುತ್ತಿಲ್ಲ. ಶ್ರೀಮಂತರು ಮಾತ್ರ ಇಲ್ಲಿ ಹಣಕೊಟ್ಟು ತಮ್ಮ ಕೆಲಸ ಮಾಡಿಕೊಳ್ಳುತ್ತಿದ್ದಾರೆ. ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಸಮತಾ ಸೈನಿಕ ದಳದ ಖಜಾಂಚಿ ಬೆಣಚುಕಲ್ ದೊಡ್ಡಿ ರುದ್ರೇಶ್, ದಲಿತ ಸೇನೆಯ ತುಂಗಣಿ ಉಮೇಶ್, ಪದಾಧಿಕಾರಿಗಳಾದ ಅಂಜನ್ ಮೂರ್ತಿ,
ಕೋಟೆ ಪ್ರಕಾಶ್, ಗುಡ್ಡೆ ವೆಂಕಟೇಶ್, ಶಂಭುಲಿಂಗಯ್ಯ, ಮಧು, ವಸಂತ್ ಕುಮಾರ್, ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆಯ ನಾಗರಾಜು, ವೆಂಕಟೇಶ್ ಹಾಗೂ ಗ್ರಾಮಸ್ಥರು
ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.