ADVERTISEMENT

ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಬೇಡ

ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವರಾಜು ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 14:22 IST
Last Updated 3 ಜೂನ್ 2020, 14:22 IST
ಮಿನಿ ವಿಧಾನಸೌಧದ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿತು
ಮಿನಿ ವಿಧಾನಸೌಧದ ಮುಂಭಾಗದಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿತು   

ಕನಕಪುರ: ರೈತರ ಪರ ಎಂದು ಹೇಳಿ ಅಧಿಕಾರಕ್ಕೆ ಬರುವ ಪಕ್ಷಗಳು ಸರ್ಕಾರ ರಚಿಸಿದ ನಂತರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವರಾಜು ಆರೋಪಿಸಿದರು.

ಇಲ್ಲಿನ ಮಿನಿ ವಿಧಾನ ಸೌಧದ ಎದುರು ಕೆಪಿಟಿಎಸ್‌ಎಲ್‌ ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸರ್ಕಾರಿ ಸ್ವಾಮ್ಯದ ವಿದ್ಯುತ್‌ ಇಲಾಖೆ ರೈತರ ಪರವಾಗಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇಂತಹ ಇಲಾಖೆಯನ್ನು ಖಾಸಗಿ ಒಡೆತನಕ್ಕೆ ನೀಡಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ADVERTISEMENT

ಖಾಸಗೀಕರಣದಿಂದ ಮೊದಲು ರೈತರಿಗೆ ಅನ್ಯಾಯವಾಗುತ್ತದೆ. ಈಗ ಉಚಿತವಾಗಿ ಪಡೆಯುತ್ತಿರುವ ಕೃಷಿ ಪಂಪಸೆಟ್‌ ಮತ್ತು ಭಾಗ್ಯ ಜ್ಯೋತಿ ಸಂಪರ್ಕಗಳಿಗೆ ಮುಂದೆ ವಿದ್ಯುತ್‌ ಬಿಲ್‌ನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದರು.

ಬಡವರಿಗೆ ಸಿಗುತ್ತಿರುವ ಉಚಿತ ವಿದ್ಯುತ್, ಗೃಹ ಬಳಕೆಗೆ ಸಿಗುತ್ತಿರುವ ಸಬ್ಸಿಡಿ ವಿದ್ಯುತ್‌ ಇನ್ನು ಮುಂದೆ ಸಿಗುವುದಿಲ್ಲ. ಖಾಸಗಿ ಕಂಪನಿಗಳು ತಮಗೆ ಇಷ್ಟ ಬಂದ ರೀತಿಯಲ್ಲಿ ವಿದ್ಯುತ್‌ ದರ ಏರಿಕೆ ಮಾಡಲಿವೆ. ಇಲಾಖೆಯಲ್ಲಿನ ನೌಕರರು ಮತ್ತು ಕಾರ್ಮಿಕರ ಮೇಲೆ ಹೆಚ್ಚಿನ ಒತ್ತಡ ಬೀಳಲಿದೆ ಎಂದು ಆತಂಕ ವ್ಯಕ್ತ‍ಪಡಿಸಿದರು.

ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಕೂಡಲೇ ರೈತ ವಿರೋಧಿಯಾಗಿರುವ ಹೊಸ ತಿದ್ದುಪಡಿ ಕಾಯ್ದೆಯನ್ನು ಮತ್ತು ಖಾಸಗಿಕರಣಗೊಳಿಸುವ ಪ್ರಯತ್ನವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಸರ್ಕಾರದ ವಿರೋಧಿ ನೀತಿಯನ್ನು ಖಂಡಿಸಿ ಎಲ್ಲೆಡೆ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದ್ದೇವೆ. ಮನವಿಗೆ ಸ್ಪಂದಿಸದಿದ್ದರೆ ಮುಂದೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ತಾಲ್ಲೂಕು ಕಚೇರಿ ಶಿರಸ್ತೇದಾರ್‌ ರಘು ಮೂಲಕ ಒತ್ತಾಯದ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಿದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.