ಮಾಡಬಾಳ್(ಮಾಗಡಿ): ಹೋಬಳಿಯ ಜೇಣುಕಲ್ಲು ಇರುಳಿಗರ ಹಾಡಿಯಲ್ಲಿ ಗಿರಿಜನ ಉಪಯೋಜನೆ ಅಡಿಯಲ್ಲಿ ₹7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿ ಕಳಪೆಯಾಗಿದೆ. ಕುಡಿಯುವ ನೀರಿಗೆ ಪರದಾಡುವಂತಾಗಿದೆ ಎಂದು ಹಾಡಿಯ ಗಿರಿಜನರು ಸಂಕಟ ತೋಡಿಕೊಂಡಿದ್ದಾರೆ.
2017ರ ಡಿಸೆಂಬರ್ 31 ರಂದು ಅಂದಿನ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹಾಡಿಯಲ್ಲಿ ವಾಸ್ತವ್ಯ ಮಾಡಿದ್ದರು. 2018ರ ಜನವರಿ 1 ರಂದು ಬಹುಕೋಟಿ ವೆಚ್ಚದಲ್ಲಿ ಗಿರಿಜನ ಉಪಯೋಜನೆ ಅಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಬಹುಕೋಟಿ ಹಣ ಖರ್ಚಾಗಿದೆ. ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ದೂರಿದರು.
ಶುದ್ಧ ಕುಡಿಯುವ ನೀರು ಸರಬರಾಜು ಘಟಕವನ್ನು ಬೇಕಾಬಿಟ್ಟಿ ಕಟ್ಟಿ ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ಲೋಕಸಭೆ ಚುನಾವಣೆ ಮುಗಿಯಲಿ ನೋಡೋಣ ಎನ್ನುತ್ತಿದ್ದಾರೆ. ಖಾಸಗಿಯವರ ತೋಟದ ಕೊಳವೆಬಾವಿಗಳಿಂದ ನೀರು ಸಂಗ್ರಹಿಸುತ್ತಿದ್ದೇವೆ ಎಂದರು.
ಶುದ್ಧ ನೀರು ಘಟಕ ದುರಸ್ತಿ ಪಡಿಸಿ ನೀರು ಸರಬರಾಜಿಗೆ ಕ್ರಮಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಅಧಿಕಾರಿ ನರಸಿಂಹಮೂರ್ತಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.