ADVERTISEMENT

ಶೈಕ್ಷಣಿಕ ಪ್ರಗತಿಗೆ ಒತ್ತು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 4:02 IST
Last Updated 13 ಸೆಪ್ಟೆಂಬರ್ 2021, 4:02 IST
ಬೂದಗುಪ್ಪೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿದ ಸಂಸದ ಡಿ.ಕೆ. ಸುರೇಶ್‌
ಬೂದಗುಪ್ಪೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿದ ಸಂಸದ ಡಿ.ಕೆ. ಸುರೇಶ್‌   

ಕನಕಪುರ: ತಾಲ್ಲೂಕಿನ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಹೈನುಗಾರಿಕೆ ಮತ್ತು ರೇಷ್ಮೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಎಲ್ಲಿ ಶಾಲಾ, ಕಾಲೇಜಿನ ಅವಶ್ಯಕತೆ ಇದೆಯೋ ಅಲ್ಲಿಗೆ ಹೊಸದಾಗಿ ಮಂಜೂರಾತಿ ಮಾಡಿಸಲಾಗುವುದು’ ಎಂದು ಸಂಸದ ಡಿ.ಕೆ. ಸುರೇಶ್‌ ತಿಳಿಸಿದರು.

ಇಲ್ಲಿನ ಬೂದುಗುಪ್ಪೆ ಗ್ರಾಮದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಪಂಚಾಯಿತಿಯ 15ನೇ ಹಣಕಾಸು ಯೋಜನೆಯಡಿ ನಿರ್ಮಾಣ ಮಾಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯನ ಆರೋಗ್ಯ ಕಾಪಾಡಬೇಕಾದರೆ ಶುದ್ಧ ಕುಡಿಯುವ ನೀರಿನ ಅವಶ್ಯಕತೆಯಿದೆ. ಅದಕ್ಕಾಗಿ ಪ್ರತಿ ಗ್ರಾಮದಲ್ಲೂ ನೀರಿನ ಘಟಕ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ಕಾಲೇಜು ಇರುವುದರಿಂದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಅನುಕೂಲ ಆಗುವಂತೆ ಇಲ್ಲಿ ಘಟಕ ನಿರ್ಮಿಸಲಾಗಿದೆ ಎಂದು ಹೇಳಿದರು.

ADVERTISEMENT

ಕನಕಪುರ ದೊಡ್ಡ ತಾಲ್ಲೂಕು ಆಗಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸರ್ಕಾರಿ ಪದವಿ ಕಾಲೇಜನ್ನು ನಗರಕ್ಕೆ ಹೊಂದಿಕೊಂಡಂತೆ ಇರುವ ಈ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಇಲ್ಲಿ ಹೊಸದಾಗಿ ಬಿಎಸ್‌ಸಿ ಪದವಿ ಕೋರ್ಸ್‌ ಪ್ರಾರಂಭವಾಗುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಎಸ್‌. ರವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾ, ಉಪಾಧ್ಯಕ್ಷ ಶಿವಕುಮಾರ್‌, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಉಷಾ ರವಿ, ನಗರಸಭೆ ಮಾಜಿ ಅಧ್ಯಕ್ಷ ಕೆ.ಎನ್‌. ದಿಲೀಪ್‌, ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ವೃಷಭೇಂದ್ರಮೂರ್ತಿ, ಪಿಡಿಒ ಶಿವಣ್ಣ, ಮುಖಂಡರಾದ ಮಂಜುನಾಥ್‌, ಬಿ.ಕೆ. ನಾಗೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.