
ರಾಮನಗರ: ‘ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗಗಳನ್ನು ಒದಗಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ 2025-26ನೇ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್ ಹೇಳಿದರು.
ನಗರದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.
‘ಪ್ರಧಾನಮಂತ್ರಿ ಅವರ ಮಹತ್ವಾಕಾಂಕ್ಷೆಯ ದೀನದಯಾಳ್ ಉಪದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ಬಡ ಯುವಜನರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿ, ಸೂಕ್ತ ಉದ್ಯೋಗ ಕಲ್ಪಿಸಲು ಸರ್ಕಾರದ ಅಥವಾ ಸರ್ಕಾರೇತರ ಸಂಘ– ಸಂಸ್ಥೆಗಳು ಮತ್ತು ವಿವಿಧ ಯೋಜನಾ ಅನುಷ್ಠಾನ ಸಂಸ್ಥೆಗಳ ಮೂಲಕ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ತಿಳಿಸಿದರು.
‘ಮೇಳದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಯುವಜನರ ಕುರಿತು ದತ್ತಾಂಶಗಳನ್ನು ಸಂಗ್ರಹಿಸಬೇಕು. ಅವರ ಸಾಮರ್ಥ್ಯಗಳನ್ನು ಪ್ರಸ್ತುತ ಲಭ್ಯವಿರುವ ಉದ್ಯೋಗಾವಕಾಶಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಉದ್ಯೋಗ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಅಂಗವಿಕಲರು, ಲಿಂಗತ್ವ ಅಲ್ಪಸಂಖ್ಯಾತರು, ವಿಶೇಷ ವರ್ಗದವರಿಗೆ ಉದ್ಯೋಗ ಒದಗಿಸುವುದು ಮೇಳದ ಉದ್ದೇಶವಾಗಿದೆ’ ಎಂದರು.
‘ಉದ್ಯೋಗ ಮೇಳದ ಕುರಿತು ವ್ಯಾಪಕವಾಗಿ ಪ್ರಚಾರ ನಡೆಸಿ ಜಾಗೃತಿ ಮೂಡಿಸಬೇಕು. ಅದಕ್ಕಾಗಿ ಕರಪತ್ರಗಳನ್ನು ಹಂಚುವುದು, ಧ್ವನಿವರ್ಧಕ ಬಳಕೆ ಹಾಗೂ ಗೋಡೆ ಬರಹ, ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.