ದೇವನಹಳ್ಳಿ: ಜಿಲ್ಲೆಯಲ್ಲಿ ನೋಂದಣಿಯಾಗಿ ಕೌಶಲ ಹೊಂದಿರುವ ವಲಸೆ ಕಾರ್ಮಿಕರಿಗೆ ಶ್ರೀಘ್ರವಾಗಿ ಉದ್ಯೋಗ ನೀಡಬೇಕು. ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಕೌಶಲ ತರಬೇತಿ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ವಲಸೆ ಕಾರ್ಮಿಕರಿಗೆ ಉದ್ಯೋಗ ಹಾಗೂ ತರಬೇತಿ ಕಲ್ಪಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಗೆ ಬೇರೆ ರಾಜ್ಯಗಳಿಂದ ವಲಸೆ ಬಂದಿರುವ ಎಲೆಕ್ಟ್ರಿಷಿಯನ್, ಪ್ಲಂಬರ್, ಪೇಂಟರ್, ಬಡಗಿ, ಚಾಲಕರು ಸೇರಿದಂತೆ ಅಸಂಘಟಿತ ವಲಸೆ ಕಾರ್ಮಿಕರಿಗೆ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಮರು ಕೌಶಲ ತರಬೇತಿ ನೀಡಿ ಆರ್ಥಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಹೇಳಿದರು.
ಕೌಶಲ ತರಬೇತಿ ಪಡೆದ ವಲಸೆ ಕಾರ್ಮಿಕರಿಗೆ ಇತರ ಇಲಾಖೆಯ ಸ್ವ-ಉದ್ಯೋಗ ಯೋಜನೆಗಳ ಅನುಕೂಲ ಪಡೆಯುವಂತೆ ಸಮನ್ವಯ ಸಾಧಿಸಬೇಕು ಎಂದರು.
ಸ್ವಸಹಾಯ ಗುಂಪುಗಳು ತಯಾರಿಸುವ ಮಾಸ್ಕ್ಗಳನ್ನು ಮಾರಾಟ ಮಾಡಲು ತಾತ್ಕಾಲಿಕ ಮಳಿಗೆ ಜಾಗ ಕಲ್ಪಿಸಲಾಗುವುದು. ಇದರಿಂದ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಆರ್ಥಿಕ ಅನುಕೂಲವಾಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎ.ಭೂಶಂಕರ್, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಸುಮಾ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಮುಕುಂದ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳುಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.