ಚನ್ನಪಟ್ಟಣ: ‘ಪ್ರಸಕ್ತ ತಂತ್ರಜ್ಞಾನ ಯುಗದಲ್ಲಿನ ಸ್ಪರ್ಧೆಗಳಿಗೆ ಹೊಂದಿಕೊಳ್ಳಬೇಕು ಎಂದರೆ ಆಂಗ್ಲಭಾಷೆ ಅನಿವಾರ್ಯ’ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು.
ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ‘ಐ ಮ್ಯಾಕ್ಸ್ ಇಂಗ್ಲಿಷ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾತೃಭಾಷೆಗೆ ಮೊದಲ ಆದ್ಯತೆ ನೀಡಿ ಆನಂತರ ಆಂಗ್ಲ ಭಾಷೆಗೆ ಆದ್ಯತೆ ನೀಡಿ ಕಲಿಸುವ ಮಾರ್ಗ ಪಾಲಿಸಬೇಕು ಎಂದರು.
ವಿದ್ಯಾರ್ಥಿಗಳ ಬುದ್ಧಿ ಕೌಶಲಕ್ಕೆ ಹಾಗೂ ಹೊರ ಜಗತ್ತಿನಲ್ಲಿ ಬದುಕು ಕಟ್ಟಿಕೊಳ್ಳಲು ಆಂಗ್ಲಭಾಷೆ ಅವಶ್ಯಕ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಯ ಜೊತೆಗೆ ಆಂಗ್ಲಭಾಷೆಯನ್ನು ಅಭ್ಯಾಸ ಮಾಡಬೇಕು. ವಿದ್ಯಾರ್ಥಿಯ ದೆಸೆಯಲ್ಲಿಯೆ ಆಂಗ್ಲಭಾಷೆಯನ್ನು ಸುಲಲಿತವಾಗಿ ಓದುವ, ಬರೆಯುವ ಹಾಗೂ ಮಾತನಾಡುವ ಅಭ್ಯಾಸವನ್ನು ಕರಗತ ಮಾಡಿಕೊಂಡಾಗ ಮುಂದೆ ಶಿಕ್ಷಣ ಕ್ಷೇತ್ರದಲ್ಲಿ ಪೈಪೋಟಿ ನೀಡಲು ಸಾಧ್ಯವಾಗುತ್ತದೆ ಎಂದರು.
ಆಂಗ್ಲಭಾಷೆಯಲ್ಲಿ ಪರಿಣಿತರಾದರೆ ಉದ್ಯೋಗಾವಕಾಶಗಳು ಸಾಕಷ್ಟು ಲಭಿಸಲಿವೆ. ಹಾಗೆಂದು ಮಾತೃಭಾಷೆಯನ್ನು ಮರೆಯಬಾರದು. ಆಂಗ್ಲಭಾಷೆಯ ವ್ಯಾಮೋಹದ ಜೊತೆಗೆ ಮಾತೃ ಭಾಷೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ನಿವೃತ್ತ ಮುಖ್ಯ ಶಿಕ್ಷಕ ನಾಗಪ್ಪ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಆಂಗ್ಲಭಾಷೆಯನ್ನು ಒಂದು ವಿಷಯವನ್ನಾಗಿ ಅಭ್ಯಾಸ ಮಾಡಬೇಕು ಎಂದರು.
ಶಾಲೆಯ ಮುಖ್ಯೋಪಾಧ್ಯಾಯಿನಿಯರಾದ ಮೆಹರ್ ಸುಲ್ತಾನ್, ಶಬಾನಾಬೇಗಂ ಹಾಗೂ ಶಿಕ್ಷಕರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.