ADVERTISEMENT

‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ’

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 13:29 IST
Last Updated 6 ಜುಲೈ 2019, 13:29 IST
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ರಾಜೇಂದ್ರ ಮಾತನಾಡಿದರು
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ರಾಜೇಂದ್ರ ಮಾತನಾಡಿದರು   

ರಾಮನಗರ: ಮನುಷ್ಯ ಆರೋಗ್ಯವಂತವಾಗಿರಲು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಬಟ್ಟೆ ಬ್ಯಾಗ್ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ ಕಂಪನಿಯ ಸಹಯೋಗದಲ್ಲಿ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಏಕಬಳಕೆ ಪ್ಲಾಸ್ಟಿಕ್ ಮುಕ್ತ ಸಮಾಜಕ್ಕಾಗಿ ಜಾಥಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ತರಕಾರಿ ತರಲು ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಇಂದು ಪ್ಲಾಸ್ಟಿಕ್ ಹೆಚ್ಚಾಗಿ ಬಳಸುತ್ತಿರುವುದರಿಂದ ಮನುಷ್ಯನಿಗೆ ಅನೇಕ ಕಾಯಿಲೆಗಳು ಬರುತ್ತಿವೆ. ಪ್ಲಾಸ್ಟಿಕ್ ಕೊಳೆಯುವ ವಸ್ತುವಲ್ಲ, ಅದನ್ನು ಸುಡುವುದರಿಂದ ವಾತಾವರಣ ಕಲುಷಿತವಾಗಿ ಓಝೋನ್ ಪದರ ಹಾಳಾಗುತ್ತಿದೆ. ಕೆಲವೆಡೆ ಓಝೋನ್ ಹಾಳಾದ ಪರಿಣಾಮ ಚರ್ಮರೋಗಗಳು ಸೃಷ್ಟಿಯಾಗಿವೆ. ಓಜೋನ್ ಪದರವನ್ನು ರಕ್ಷಿಸುವ ಜವಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಅದಕ್ಕಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ADVERTISEMENT

ಪ್ಲಾಸ್ಟಿಕ್ ಬಳಕೆಯಿಂದ ವಾತಾವರಣದಲ್ಲಿ ಏರುಪೇರಿನಿಂದ ಮಳೆಯ ಕೊರತೆ ಉಂಟಾಗಿದೆ. ಸರಿಯಾದ ಸಂದರ್ಭದಲ್ಲಿ ಮಳೆ ಬರುತ್ತಿಲ್ಲ, ಕುಡಿಯುವ ನೀರಿಗೆ ಸಮಸ್ಯೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಜನರಿಗೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ಮನವರಿಕೆ ಮಾಡಿ ಎಂದು ಹೇಳಿದರು.

ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ. ವೆಂಕಟಪ್ಪ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಕೆ. ಮಾಯಣ್ಣ ಗೌಡ, ಪರಿಸರ ಅಧಿಕಾರಿ ಸಿ. ಸಿದ್ದರಾಮಯ್ಯ, ನಗರಸಭೆ ಆಯುಕ್ತೆ ಬಿ. ಶುಭಾ, ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಅಧಿಕಾರಿಗಳಾದ ಅರವಿಂದ್ ಕುಮಾರ್ ಸಿಂಗ್, ಬಿ.ಎಸ್. ನಾಗರಾಜ್ ಇದ್ದರು.

ಶಾಲಾ ವಿದ್ಯಾರ್ಥಿಗಳು ಹಾಗೂ ಪೌರ ಕಾರ್ಮಿಕರು ನಗರದ ವಿವಿಧ ಪ್ರದೇಶಗಳಲ್ಲಿ ಜಾಥಾ ನಡೆಸುವ ಮೂಲಕ ಪ್ಲಾಸ್ಟಿಕ್ ಬಳಕೆ ಕುರಿತು ಜನರಲ್ಲಿ ಅರಿವು ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.