ADVERTISEMENT

ದ್ವಿತೀಯ PU ವಿದ್ಯಾರ್ಥಿಗಳಿಗೆ ರಾಮನಗರದಲ್ಲಿ ಪರೀಕ್ಷಾ ಮಾರ್ಗದರ್ಶಿ ಕಾರ್ಯಾಗಾರ

ಫೆ. 13ರಂದು ‘ಪ್ರಜಾವಾಣಿ’–‘ಡೆಕ್ಕನ್ ಹೆರಾಲ್ಡ್’ ವತಿಯಿಂದ ಜಿ.ಪಂ. ಸಭಾಂಗಣದಲ್ಲಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 2:44 IST
Last Updated 12 ಫೆಬ್ರುವರಿ 2026, 2:44 IST
Logo
Logo   

ರಾಮನಗರ: ಜೀವನದಲ್ಲಿ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಬದುಕಿನ ದಿಕ್ಕನ್ನು ನಿರ್ಧರಿಸುತ್ತದೆ. ದ್ವಿತೀಯ ಪಿಯು ಪರೀಕ್ಷೆ ಸಮೀಪಿಸುತ್ತಿರುವುದರಿಂದ ಪರೀಕ್ಷೆ ಎದುರಿಸುವ ಬಗೆ ಹಾಗೂ ಮುಂದೇನು ಮಾಡಬೇಕು ಎಂಬುದರ ಕುರಿತು ‘ಪ್ರಜಾವಾಣಿ‘ ಮತ್ತು ‘ಡೆಕ್ಕನ್ ಹೆರಾಲ್ಡ್’ ದಿನಪತ್ರಿಕೆಯು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಬಿಡದಿಯ ಜ್ಞಾನ ವಿಕಾಸ್ ವಿದ್ಯಾಸಂಘ (ರಿ) ಸಹಯೋಗದಲ್ಲಿ ಫೆ. 13ರಂದು ‘ಪರೀಕ್ಷಾ ಮಾರ್ಗದರ್ಶಿ ಕಾರ್ಯಾಗಾರ’ ಹಮ್ಮಿಕೊಂಡಿದೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರವನ್ನು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಉದ್ಘಾಟಿಸಿ ಮಕ್ಕಳಿಗೆ ಸ್ಫೂರ್ತಿ ತುಂಬಲಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್ ಮತ್ತು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸ್ನೇಹ ಪಿ.ವಿ ಅವರು ಪೇರಣೆಯ ಮಾತುಗಳನ್ನಾಡಲಿದ್ದಾರೆ. ವಿಶೇಷ ಉಪಸ್ಥಿತಿ ವಹಿಸಲಿರುವ ಜ್ಞಾನ ವಿಕಾಸ್ ವಿದ್ಯಾಸಂಘದ ಸಂಸ್ಥಾಪಕ ಅಧ್ಯಕ್ಷ ಸಿ.ಎಂ. ಲಿಂಗಪ್ಪ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಲಿದ್ದಾರೆ.

‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕ ಎಂ. ಮರಿಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ ಜಿ. ಕೊತ್ತಿಪುರ, ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿಯ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಪ್ರದೀಪ್ ಹಾಗೂ ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್‌ ಪತ್ರಿಕಾ ಬಳಗದ ಪ್ರಸರಣ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಜಗನ್ನಾಥ ಜೋಯಿಸ್ ಅವರು ಭಾಗವಹಿಸಲಿದ್ದಾರೆ.

ADVERTISEMENT

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ವಿಷಯವಾರು ಉಪನ್ಯಾಸದಲ್ಲಿ ಕಲಾ ವಿಭಾಗದ ಕುರಿತು ಕನಕಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ದೊಡ್ಡಬೋರಯ್ಯ, ವಿಜ್ಞಾನ ವಿಭಾಗದ ಕುರಿತು ಚನ್ನಪಟ್ಟಣ ತಾಲ್ಲೂಕಿನ ಮೈಲನಾಯ್ಕನಹಳ್ಳಿಯ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್, ವಾಣಿಜ್ಯ ವಿಭಾಗದ ಕುರಿತು ರಾಮನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅನ್ಸರ್‌ ಉಲ್‌ಹಕ್ ಹಾಗೂ ಇಂಗ್ಲಿಷ್ ವಿಷಯ ಕುರಿತು ಹಾರೋಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಅವರು ಟಿಪ್ಸ್‌ಗಳನ್ನು ನೀಡಲಿದ್ದಾರೆ.

ವಿಶೇಷ ಉಪನ್ಯಾಸ ಬೆಳಿಗ್ಗೆ 11 ಗಂಟೆಗೆ

‘ಕಲಿಕಾ ಕೌಶಲ್ಯ ಮತ್ತು ಪಿಯುಸಿ ನಂತರ ಮುಂದೇನು?’ ವಿಷಯ ಕುರಿತು ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮತ್ತು ವೃತ್ತಿ ಮಾಹಿತಿ ಮಾರ್ಗದರ್ಶಕ ಡಾ. ಮೋಹನ್ ದಾಸ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 12ಕ್ಕೆ ‘ಪರೀಕ್ಷೆ ಎದುರಿಸಲು ಮಾನಸಿಕ ಸಿದ್ಧತೆ’ ವಿಷಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಎಸ್. ಅವರು ಸಲಹೆಗಳನ್ನು ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.