ಚನ್ನಪಟ್ಟಣ: ಮನುಷ್ಯನಿಗೆ ವಯಸ್ಸಾದಂತೆ ಕಣ್ಣಿನ ದೃಷ್ಟಿ ಕ್ಷೀಣಿಸುವುದರಿಂದ, ಕಣ್ಣಿನ ಬಗ್ಗೆ ಜಾಗ್ರತೆ ಅವಶ್ಯಕ ಎಂದು ಸಾರ್ವಜನಿಕ ಆಸ್ಪತ್ರೆಯ ಕಣ್ಣಿನ ವಿಭಾಗದ ಅಧಿಕಾರಿ ದೇವರಾಜು ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಲಯನ್ಸ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಂಸ್ಥೆ ಸಂಯುಕ್ತಾಶ್ರಯದ ಉಚಿತ ಕಣ್ಣಿನ ಪರೀಕ್ಷೆ ಮತ್ತು ಆಧುನಿಕ ಶಸ್ತ್ರಚಿಕಿತ್ಸೆ ಮೂಲಕ ಐ.ಎಲ್.ಒ ಅಳವಡಿಕೆ ಶಿಬಿರದಲ್ಲಿ ಮಾತನಾಡಿದರು.
ಅಂಧತ್ವ ಎಂಬುದು ಮಾನವನಿಗೆ ಶತ್ರುವಿದ್ದಂತೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಮುಖಾಂತರ ಕಣ್ಣಿನ ರಕ್ಷಣೆಯನ್ನು ಮಾಡಿಕೊಳ್ಳಬೇಕು. ಪ್ರತಿಯೊಬ್ಬರು ಕೂಡ ತಮ್ಮ ಕಣ್ಣಿನ ತೊಂದರೆ ಎದುರಾದಾಗ ತಕ್ಷಣ ಸ್ಥಳೀಯ ಕಣ್ಣಿನ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡು ದೃಷ್ಟಿದೋಷವನ್ನು ನಿವಾರಣೆ ಮಾಡಿಕೊಳ್ಳಬೇಕು ಎಂದರು.
ಬೆಂಗಳೂರು ಪಶ್ಚಿಮ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರು ಕಣ್ಣಿನ ತಪಾಸಣೆ ಮಾಡಿಸಿಕೊಂಡು ತೊಂದರೆ ಇದ್ದರೆ ಲಯನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ಕಣ್ಣಿನ ತಪಾಸಣೆಗೆ ಒಳಪಟ್ಟು ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿದ ಸುಮಾರು 30ಕ್ಕೂ ಹೆಚ್ಚು ಮಂದಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು. ಲಯನ್ಸ್ ಆಸ್ಪತ್ರೆಯ ಉಸ್ತುವಾರಿ ನಾಗೇಶ್, ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.