ADVERTISEMENT

‘ಆಧುನಿಕತೆ ಭರಾಟೆಯಿಂದ ಜನಪದ ಕಲೆಗಳು ನಾಶ’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 9:45 IST
Last Updated 1 ಡಿಸೆಂಬರ್ 2018, 9:45 IST
ಚನ್ನಪಟ್ಟಣ ತಾಲ್ಲೂಕಿನ ಬೆಳಕೆರೆಯಲ್ಲಿ ನಡೆದ ಯುವ ಸೌರಭ ಕಾರ್ಯಕ್ರಮವನ್ನು ಅನ್ನದಾನೇಶ್ವರ ಸ್ವಾಮೀಜಿ ಉದ್ಘಾಟಿಸಿದರು
ಚನ್ನಪಟ್ಟಣ ತಾಲ್ಲೂಕಿನ ಬೆಳಕೆರೆಯಲ್ಲಿ ನಡೆದ ಯುವ ಸೌರಭ ಕಾರ್ಯಕ್ರಮವನ್ನು ಅನ್ನದಾನೇಶ್ವರ ಸ್ವಾಮೀಜಿ ಉದ್ಘಾಟಿಸಿದರು   

ಚನ್ನಪಟ್ಟಣ: ‘ಆಧುನಿಕತೆಯ ಭರಾಟೆಗೆ ಸಿಲುಕಿ ಜನಪದ ಕಲೆಗಳು ನಶಿಸಿ ಹೋಗುತ್ತಿವೆ’ ಎಂದು ಅರ್ಚಕರಹಳ್ಳಿ ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬೆಳಕೆರೆ ಗ್ರಾಮದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಯುವ ಸೌರಭ ಹಾಗೂ ಗ್ರಾಮದ ಹಬ್ಬ’ ಉದ್ಘಾಟಿಸಿ ಮಾತನಾಡಿ, ಗ್ರಾಮ ದೇವತೆಗಳ ಹಬ್ಬದ ಜೊತೆಗೆ ನಶಿಸಿಹೋಗುತ್ತಿರುವ ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ನಶಿಸಿ ಹೋಗುತ್ತಿರುವ ಇಂಥ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ ಯುವ ಸೌರಭ ಕಾರ್ಯಕ್ರಮ ಆಯೋಜಿಸಿರುವುದು ಸ್ವಾಗತಾರ್ಹ. ಜನಪದ ಕಲೆ ಉಳಿಸುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಜನಪದ ಕಲಾವಿದರನ್ನು ಗುರುತಿಸುವ ಕೆಲಸವಾಗಬೇಕು. ಇದನ್ನು ಇಲಾಖೆಯ ಜೊತೆಗೆ ಸಂಘಸಂಸ್ಥೆಗಳು ಮಾಡಬೇಕು ಎಂದರು.

ADVERTISEMENT

ಕನ್ನಡ ಸಂಸ್ಕೃತಿ ಇಲಾಖೆಯ ಜಿಲ್ಲಾ ನಿರ್ದೇಶಕ ರಾಜು ಮಾತನಾಡಿ, ಗ್ರಾಮೀಣ ಪ್ರದೇಶದ ಯುವ ಕಲಾವಿದರಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಯುವ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ರಾಮೀಣ ಪ್ರದೇಶದ ಯುವ ಜನತೆ ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆಯಬೇಕು ಎಂದರು.

ಗ್ರಾಮದ ಬೀದಿಗಳಲ್ಲಿ ತಮಟೆ, ಪೂಜಾ ಕುಣಿತ, ವೀರಗಾಸೆ, ಪಟ್ಟದ ಕುಣಿತ, ಚಿಲಿಪಿಲಿ ಗೊಂಬೆ ಸೇರಿದಂತೆ ಹಲವಾರು ಕಲಾ ಪ್ರಕಾರಗಳ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ, ಜೆ.ಡಿ.ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ.ಜಯಮುತ್ತು, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಮಾಗಡಿ ಶಿಶು ಅಭಿವೃದ್ಧಿ ಅಧಿಕಾರಿ ಸುರೇಂದ್ರ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಎಂ.ಕುಮಾರ್, ಗ್ರಾಮದ ಯುವ ಮುಖಂಡ ಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ್, ಪಾಂಡು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.