ಬಿಡದಿ: ಸೋಮವಾರದಿಂದ ಆರಂಭಗೊಳ್ಳುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೌರಿಪುರದ 14 ವಿದ್ಯಾರ್ಥಿಗಳಿಗೆ ಕಲಿಕಾ ಕೇಂದ್ರ ತೆರೆದು, ಪರೀಕ್ಷೆಗೆ ಸಜ್ಜುಗೊಳಿಸಲಾಗಿದೆ.
ಈ ಮಕ್ಕಳನ್ನು ಗುರುತಿಸಿ ಸುಮಾರು 9 ತಿಂಗಳಿಂದ ಶಿಕ್ಷಣ ನೀಡಿ ಅವರಿಗೆ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಮಾಡಿಕೊಡಲಾಗುತ್ತಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ ಅವರು ಗ್ರಾಮಕ್ಕೆ ಭೇಟಿ ನೀಡಿ ಮಕ್ಕಳ ಮನವೊಲಿಸಿ ಕಲಿಕಾ ಕೇಂದ್ರಕ್ಕೆ ತಂದು ಈಗ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಇದೇ 19ರಂದು ಈ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.
ಐದನೇ ತರಗತಿಯಿಂದ ಒಂಬತ್ತನೇ ತರಗತಿವರೆಗೆ ವಿವಿಧ ತರಗತಿ ಹಂತದಲ್ಲಿ ಶಾಲೆ ತೊರೆದ ಒಟ್ಟು 17 ವಿದ್ಯಾರ್ಥಿಗಳನ್ನು ಗುರುತಿಸಲಾಗಿತ್ತು. ಅವರಿಗಾಗಿ ಹಕ್ಕಿಪಿಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳ ಕಲಿಕಾ ಕೇಂದ್ರ ತೆರೆಯಲಾಗಿತ್ತು. ಅಲ್ಲಿ ಅವರ ಕಲಿಕೆಗೆ ಅವಕಾಶ ಕಲ್ಪಿಸಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿದೆ.
ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಿರುವ ಲೇಖನ ಸಾಮಗ್ರಿ ನೀಡಲಾಗಿದೆ. ಮಕ್ಕಳನ್ನು ಶಿಕ್ಷಣದ ಕಡೆಗೆ ಮನವೊಲಿಸಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಾಣಕಲ್ ನಟರಾಜ್ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಶಿಕ್ಷಣ ವಂಚಿತ ಮಕ್ಕಳಿಗೆ ಬೆಂಬಲವಾಗಿ ನಿಂತ ರಾಮನಗರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ, ಸಂಪನ್ಮೂಲ ವ್ಯಕ್ತಿ ಚಿಕ್ಕವೀರಯ್ಯ, ಹಕ್ಕಿಪಿಕ್ಕಿ ಶಾಲೆಯ ಮುಖ್ಯಶಿಕ್ಷಕ ಆರ್.ಬಿ. ಗೌಡ, ಶಿಕ್ಷಕರಾದ ಪ್ರಮೀಳಾ, ಸುಗುಣಾ, ಹೇಮಂತ್ ಕುಮಾರಿ ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.