ಕಸಬಾ (ರಾಮನಗರ): ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ನರೇಗಾ ಯೋಜನೆಯ ಅಡಿ 30 ಸಾವಿರ ಮಾನವ ದಿನಗಳನ್ನು ಸೃಜಿಸಿ ಸುಮಾರು ₹ 1.2 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹೇಳಿದರು.
ಇಲ್ಲಿನ ಹರಿಸಂದ್ರ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ನರೇಗಾ ಕಾರ್ಯಕ್ರಮದಲ್ಲಿ ರೈತರಿಗೆ ದನದ ಕೊಟ್ಟಿಗೆ ನಿರ್ಮಾಣ, ಜಲಾಮೃತ ಯೋಜನೆಯಡಿಯಲ್ಲಿ ಹನ್ನೊಂದು ಚಕ್ ಡ್ಯಾಂಗಳ ನಿರ್ಮಾಣ, ಕುರಿ ಶೆಡ್ ಗಳ ನಿರ್ಮಾಣ, ಅಂತರ್ಜಲವನ್ನು ವೃದ್ಧಿಸಲು ಹಳ್ಳಿಗಳಲ್ಲಿರುವ ಕಟ್ಟೆಗಳ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಏಳು ನೂರಕ್ಕೂ ಅಧಿಕ ಕಾಮಗಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದು 2019–20 ರ ಕ್ರಿಯಾ ಯೋಜನೆಯಲ್ಲಿ ಈ ಕಾಮಗಾರಿಗಳನ್ನು ಅಳವಡಿಸಲು ಪ್ರಯತ್ನಿಸಲಾಗುವುದು. ಎಲ್ಲಾ ಸದಸ್ಯರುಗಳನ್ನು ಗಣನೆಗೆ ತೆಗೆದುಕೊಂಡು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ನೋಡಲ್ ಅಧಿಕಾರಿ ವಾಸು ಮಾತನಾಡಿ ಗ್ರಾಮಸ್ಥರು ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಪ್ರತಿಯೊಬ್ಬರು ನೋಂದಾಯಿಸಿಕೊಳ್ಳಬೇಕು. ಕಾಲಕಾಲಕ್ಕೆ ಸಂಬಂಧಿಸಿದ ಇಲಾಖೆಗಳಿಗೆ ಭೇಟಿ ನೀಡಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ, ಸದಸ್ಯರಾದ ಟಿ.ಮಹೇಶ್, ಟಿ.ರಮೇಶ್, ಕೃಷ್ಣಮೂರ್ತಿ, ಪುಟ್ಟಣ್ಣ, ಶೋಭಾ, ಮುಖಂಡರಾದ ವಡೇರಹಳ್ಳಿ ತಿಮ್ಮಣ್ಣ, ಹನುಮಂತೆಗೌಡನದೊಡ್ಡಿ ಮಧು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.