ADVERTISEMENT

ಅದ್ದೂರಿಯಾಗಿ ಅರಸು ಜನ್ಮದಿನ ಆಚರಣೆ: ಶಾಸಕ ಇಕ್ಬಾಲ್

ಅಧಿಕಾರಿಗಳು, ಅಹಿಂದ ಮುಖಂಡರೊಂದಿಗೆ ಇಕ್ಬಾಲ್ ಹುಸೇನ್ ಪೂರ್ವಸಿದ್ಧತಾ ಸಭೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 2:13 IST
Last Updated 6 ಆಗಸ್ಟ್ 2025, 2:13 IST
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಿ. ದೇವರಾಜು ಅರಸು ಜನ್ಮದಿನ ಆಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ  ಹಿಂದುಳಿದ ವರ್ಗಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಡಿ. ದೇವರಾಜು ಅರಸು ಜನ್ಮದಿನ ಆಚರಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ  ಹಿಂದುಳಿದ ವರ್ಗಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು   

ರಾಮನಗರ: ‘ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಇದೇ 20ರಂದು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು. ಕಾರ್ಯಕ್ರಮಕ್ಕೆ ಹಿಂದುಳಿದ ವರ್ಗಗಳ ಸಂಘ -ಸಂಸ್ಥೆಗಳು, ಸಂಘಟನೆಗಳು ಹಾಗೂ ಅರಸು ಅವರ ಅಭಿಮಾನಿಗಳು ಸಹಕಾರ ನೀಡಬೇಕು’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಇತಿಹಾಸದಲ್ಲಿ ಹಿಂದುಳಿದ ವರ್ಗಕ್ಕೆ ಶಕ್ತಿ ನೀಡಿ, ಬದುಕಿಗೆ ಜೀವ ತುಂಬಿ ಏಳಿಗೆಗೆ ಶಿಕ್ಷಣದ ಸ್ಪರ್ಶದ ಜೊತೆಗೆ ಕಾನೂನಾತ್ಮಕ ಬಲ ನೀಡಿದ ಮೇರು ನಾಯಕ ಅರಸು’ ಎಂದರು.

‘ಹಿಂದುಳಿದವರನ್ನು ಮೇಲೆತ್ತಲು ವ್ಯವಸ್ಥಿತವಾದ ಕಾರ್ಯಕ್ರಮಗಳನ್ನು ರೂಪಿಸಿದ ಅರಸು ಅವರು, ದೀನದಲಿತರು ಹಾಗೂ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಅಂತಹ ಮಹಾನ್ ನಾಯಕನ ಜನ್ಮ ದಿನಾಚರಣೆಯನ್ನು ಜಿಲ್ಲೆಯಲ್ಲಿ ಬಹಳ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಹಾಗೂ ಎಲ್ಲರ ಸಹಭಾಗಿತ್ವದಲ್ಲಿ ಗೌರವಯುತವಾಗಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಜಿಲ್ಲಾಮಟ್ಟದ ಕಾರ್ಯಕ್ರಮದ ಮೆರವಣಿಗೆಯಲ್ಲಿ ಭಾಗವಹಿಸಲು ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಕರೆತರಲಾಗುವುದು.ಆನೆ ಹಾಗೂ ಬೆಳ್ಳಿ ರಥದಲ್ಲಿ ಅರಸು ಅವರ ಭಾವಚಿತ್ರ ಇರಿಸಿ ಮೆರವಣಿಗೆ ಮಾಡಲಾಗುವುದು. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರನ್ನು ಸನ್ಮಾನಿಸಲಾಗುವುದು’ ಎಂದರು.

‘ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುವುದು. ಹಿಂದುಳಿದ ವರ್ಗಗಳ ಶಾಲಾ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿಯಂತಹ ಕೆಲಸಗಳನ್ನು ಮಾಡಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ, ಎಲ್ಲರೂ ಒಗ್ಗಟ್ಟಾಗಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿ, ‘ಅರಸು ಅವರ ಜಯಂತಿಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹ ಆಚರಿಸಲಾಗುವುದು’ ಎಂದರು. ಎಲ್ಲರನ್ನು ಒಳಗೊಂಡು ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಬೇಕು ಎಂದು ಸಭೆಯಲ್ಲಿದ್ದ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಸಲಹೆ ನೀಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಬಿಲಾಲ್, ಬೆಂಗಳೂರು ದಕ್ಷಿಣ ಜಿಲ್ಲೆಯ ಹಿಂದುಳಿದ ಜಾತಿಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು, ಪ್ರಧಾನ ಕಾರ್ಯದರ್ಶಿ ನಾರಾಯಣ್, ಕಾರ್ಯಧ್ಯಕ್ಷ ಆರ್. ರಂಗಪ್ಪ, ಮಾಗಡಿ ಮಾರಣ್ಣ, ಬಿ. ಉಮೇಶ, ಸುಜ್ಞಾನಮೂರ್ತಿ, ಪವಿತ್ರ ಪ್ರಭಾಕರ ರೆಡ್ಡಿ, ಗುರುವೇಗೌಡ, ಸುಗಂಧರಾಜ ಅರಸ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.