ರಾಮನಗರ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಅನುದಾನ ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಕ್ರೈಸ್ತ ಘಟಕದ ಕಾರ್ಯದರ್ಶಿ ಎಡ್ವಿನ್ ಪ್ರೇಮಾನಂದ್ ಹೇಳಿದರು.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯ ಜತೆಗೆ, ₹200 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
ಕಳೆದ ವರ್ಷದ ಬಜೆಟ್ ನಲ್ಲಿ ನಮ್ಮ ಸಮುದಾದಯ ಅಭಿವೃದ್ಧಿಗಾಗಿ ಕೇವಲ ₨2 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ₹50 ಲಕ್ಷ ಮಾತ್ರ ವೆಚ್ಚಾಗಿದೆ. ಆದರೆ, ಉಳಿದ ಹಣದ ಕುರಿತು ಮಾಹಿತಿಯೇ ಇಲ್ಲ ಎಂದು ತಿಳಿಸಿದರು.
ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳು ಮಾಡದೆ ಇರುವ ಉತ್ತಮ ಕಾರ್ಯವನ್ನು ಜೆಡಿಎಸ್ ಮಾಡಿದೆ. ಆ ಮೂಲಕ ಪಕ್ಷ ಒಂದು ವರ್ಗಕ್ಕೆ ಸೀಮಿತವಾಗದೆ, ಎಲ್ಲರನ್ನು ಸಮಾನರನ್ನಾಗಿ ಕಾಣುತ್ತಿದೆ ಎಂದರು.
10 ವರ್ಷಗಳಿಂದ ಕ್ರೈಸ್ತ ಸಮುದಾಯದವರು ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಸಲುವಾಗಿ ಹೋರಾಟಗಳನ್ನು ನಡೆಸುತ್ತಿದ್ದರು. ಆದರೆ, ಈ ಸರ್ಕಾರ ನಮ್ಮ ಮನವಿಯನ್ನು ಆಲಿಸಿ, ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಕ್ರೈಸ್ತ ಸಮುದಾಯದವರು ವಾಸಿಸುತ್ತಿದ್ದೇವೆ. ನಮಗೆ ಸರ್ಕಾರದಿಂದ ದೊರೆಯುವ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲ. ಯೋಜನೆಗಳನ್ನು ಜನರು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಪದಾಧಿಕಾರಿಗಳಾದ ಸುನೀಲ್ ಕುಮಾರ್, ಎರ್ಲಿನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.