ADVERTISEMENT

ಆರ್‌ಎಸ್ಎಸ್‌ ಬಗ್ಗೆ ಅಧ್ಯಯನ ಮಾಡಿ ಆಘಾತವಾಯಿತು: ಎಚ್‌ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 15:46 IST
Last Updated 5 ಅಕ್ಟೋಬರ್ 2021, 15:46 IST
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ   

ರಾಮನಗರ:‘ಕಳೆದ ಹಲವು ದಿನಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಅಧ್ಯಯನ ಮಾಡುತ್ತಿದ್ದೇನೆ. ಈ ಸಂಘಟನೆ ಹೇಗೆ ಕೆಲಸ ಮಾಡುತ್ತದೆ ಹಾಗೂ ಚುನಾಯಿತ ಸರ್ಕಾರಗಳನ್ನು ಹೇಗೆ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುತ್ತದೆ ಎಂಬುದನ್ನು ತಿಳಿದು ಆಘಾತ ಆಯಿತು' ಎಂದುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದ ಕುಮಾರಸ್ವಾಮಿ, ಸಂಘದ ಐಡಿಯಾಲಜಿ ಹೊಂದಿರುವ ಅಧಿಕಾರಿಗಳನ್ನು ಆರ್‌ಎಸ್ಎಸ್‌ ತನ್ನ ತಾಳಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ನಾಲ್ಕು ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಸಂಘದ ತರಬೇತಿ ಪಡೆದು ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಆರ್‌ಎಸ್‌ಎಸ್ ಕೀಲುಗೊಂಬೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ ಮತ್ತು ನಿರ್ದೇಶನದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಇದೇ ವೇಳೆ ಹರಿಹಾಯ್ದರು.

ADVERTISEMENT

ನಮ್ಮ ರಾಜ್ಯದ ಬಿಜೆಪಿ ಸರ್ಕಾರದ ಎರಡನೇ ಮುಖ್ಯಮಂತ್ರಿ ಕೇಶವಕೃಪಕ್ಕೆ ಏಕೆ ಹೋಗುತ್ತಾರೆ? ಎಲ್ಲಿಯೇ ಹೋದರೂ ಆರೆಸ್ಸೆಸ್ ಕಚೇರಿಗಳಿಗೆ ಯಾಕೆ ಹೋಗುತ್ತಾರೆ?ಎಂದು ಪ್ರಶ್ನಿಸಿದ ಕುಮಾರಸ್ವಾಮಿ ‘ರಾಜ್ಯದಲ್ಲಿ ಇರುವುದು ಸಂಪೂರ್ಣ ಆರ್‌ಎಸ್‌ಎಸ್‌ ಸರ್ಕಾರ. ಆದರೆ ಕೇಶವಕೃಪಕ್ಕೆ ಜನ ಮತ ಹಾಕಿಲ್ಲ ಎಂಬುದನ್ನು ಆಡಳಿತ ನಡೆಸುವವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಇವರಿಗೆ ದೇಶದ ಮತ್ತು ರಾಜ್ಯದ ಪ್ರಗತಿಯ ಅಜೆಂಡಾ ಇಲ್ಲ. ಜನರನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವುದೇ ಅವರ ಅಜೆಂಡಾ. ನಾವು ಕೂಡ ಹಿಂದುಗಳೇ. ಆದರೆ ನಮಗೆ ಹಿಂದುತ್ವಕ್ಕಿಂತ ಮೊದಲು ದುಡಿಯುವ ಕೈಗೆ ದುಡಿಮೆ ಬೇಕು. ಅನ್ನ ಬೇಕು. ಸರ್ಕಾರ ಈ ರಾಜ್ಯದ, ದೇಶದ ಬಡವರ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಅಟಲ್ ಬಿಹಾರಿ ವಾಜಪೇಯಿ ಎಂಥ ನಾಯಕರು ಎಂಬುದು ನಮಗೆಲ್ಲರಿಗೂ ಗೊತ್ತು. ಹೆಜ್ಜೆ ಹೆಜ್ಜೆಗೂ ಅವರ ಸರ್ಕಾರಕ್ಕೆ ಅಡ್ಡಿ ಮಾಡಿದ್ದು ಆರ್‌ಎಸ್‌ಎಸ್‌. ಜಿನ್ನಾ ಅವರನ್ನು ಹೊಗಳಿದ ಒಂದೇ ಕಾರಣಕ್ಕೆ ಅಡ್ವಾಣಿ ಅವರನ್ನು ರಾಜಕೀಯವಾಗಿ ಮುಗಿಸಲಾಯಿತು. ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಅಪಮಾನಕರ ರೀತಿಯಲ್ಲಿ ಕೆಳಗಿಳಿಸಲಾಯಿತು ಎಂದು ಟೀಕಿಸಿದರು.

ಹಿಂದುತ್ವ ಹಾಗೂ ಕೋಮುವಾದವನ್ನು ಹರಡುವ ಕೆಲಸವನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಅದು ಮಾಡಿಲ್ಲ. ದೇಶದ ಬಡತನದ ಬಗ್ಗೆ, ಸಮಸ್ಯೆಗಳ ಬಗ್ಗೆ ಆರ್‌ಎಸ್‌ಎಸ್‌ ಸಭೆಗಳಲ್ಲಿ ಚರ್ಚೆ ಆಗಿಲ್ಲ. ದೇಶವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವುದು ಒಂದೇ ಅವರ ಅಜೆಂಡಾ. ಆರ್‌ಎಸ್‌ಎಸ್‌ ಅನ್ನೇ ಕೇಂದ್ರಬಿಂದು ಆಗಿಸಿಕೊಂಡು ಬಿಜೆಪಿ ಕೆಲಸ ಮಾಡುತ್ತಿದೆ. ರಾಜಕೀಯವಾಗಿ ಪಕ್ಷಕ್ಕೆ ಸ್ವಾತಂತ್ರ್ಯ ಇಲ್ಲ. ಕೆಲ ವರ್ಷಗಳ ಹಿಂದೆ ಬಿಜೆಪಿಯನ್ನೇ ವಿಸರ್ಜಿಸಿ ಹೊಸ ಪಕ್ಷ ರಚನೆಯತ್ತ ಅದು ಅಲೋಚನೆ ಮಾಡಿತ್ತು ಎಂದು ಕುಮಾರಸ್ವಾಮಿ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.