ಮಾಗಡಿ: ತಾಲ್ಲೂಕಿನ ಹುಳ್ಳೇನಹಳ್ಳಿಯಲ್ಲಿ ಎಂ.ಎಸ್ ರಾಮಯ್ಯ ಆಸ್ಪತ್ರೆ, ಡಿ.ಕೆ.ಚಾರಿಟಬಲ್ ಟ್ರಸ್ಟ್ ಹಾಗೂ ಮಹಾನಾಡು ಕಟ್ಟೆಮನೆ ಕುಟುಂಬದ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.
ಈ ವೇಳೆ ಶಾಸಕ ಎಚ್.ಸಿ.ಬಾಲಕೃಷ್ಣ ಮಾತನಾಡಿ, ಆರೋಗ್ಯವೇ ಭಾಗ್ಯ ಮನುಷ್ಯನಿಗೆ ಆರೋಗ್ಯ ಚೆನ್ನಾಗಿ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಹುಳ್ಳೆನಹಳ್ಳಿ, ಚಿಕ್ಕಹಳ್ಳಿ ಮತ್ತು ಸಂಕೀಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು ನುರಿತ ವೈದ್ಯರು ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇಲ್ಲಿ ಎಲ್ಲಾ ರೀತಿಯ ರೋಗಗಳಿಗೆ ಚಿಕಿತ್ಸೆ ನೀಡಿ, ಅಗತ್ಯವಿದ್ದರೆ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುತ್ತದೆ. ಹಾಗಾಗಿ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಿ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ₹72 ಕೋಟಿ ವೆಚ್ಚದಲ್ಲಿ ತಿಪ್ಪಸಂದ್ರ ಹ್ಯಾಂಡ್ನಿಂದ ಸುಗ್ಗನಹಳ್ಳಿವರೆಗೆ ಶೀಘ್ರ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಕುಮಾರ್ ಮಾತನಾಡಿ, ಶಿಬಿರದಲ್ಲಿ 2000ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ತಪಾಸಣೆ ಮಾಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ತಿಪ್ಪಸಂದ್ರ ವ್ಯಾಪ್ತಿಯಲ್ಲಿ ಶಿಬಿರವನ್ನು ಏರ್ಪಡಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು.
ಶಿಬಿರದಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು. ಈ ವೇಳೆ ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆಂಚೇಗೌಡ, ಬಮೂಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಎಂ.ಕೆ.ಧನಂಜಯ ನರಸಿಂಹಮೂರ್ತಿ, ದಿವ್ಯ ಗಂಗಾಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.