ರಾಮನಗರ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯೂ ಭಾರಿ ಮಳೆ ಸುರಿದಿದ್ದು, ಅಲ್ಲಲ್ಲಿ ಜನಜೀವನಕ್ಕೆ ತೊಂದರೆ ಆಗಿದೆ.
ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದ್ದು, ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ಕಾರ್ಖಾನೆಗಳು ಜಲಾವೃತಗೊಂಡಿವೆ.
ರಾಮನಗರ ತಾಲ್ಲೂಕಿನ ಮೇಗಳದೊಡ್ಡಿ ಕೆರೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದ್ದು, ಏರಿ ಒಡೆಯುವ ಆತಂಕ ಎದುರಾಗಿದೆ. ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರದಲ್ಲಿ ಕೆರೆ ಕೋಡಿ ಬಿದ್ದು, ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ದಿನಬಳಕೆ ಸಾಮಗ್ರಿಗಳು, ತೋಟಗಳಲ್ಲಿನ ತೆಂಗು ನೀರಿನಲ್ಲಿ ತೇಲಿದೆ. ರೇಷ್ಮೆ ಬೆಳೆಗೂ ಹಾನಿಯಾಗಿದೆ.
ಸಾಕಷ್ಟು ಕಡೆಗಳಲ್ಲಿ ರಸ್ತೆಗಳು ಕೊಚ್ಚಿ ಹೋಗಿವೆ. ಈವರೆಗೆ ಜಿಲ್ಲೆಯಲ್ಲಿ ಮಳೆಯಿಂದಾಗಿ 600 ಹೆಕ್ಟೇರ್ ಗೂ ಹೆಚ್ಚು ಬೆಳೆ ಹಾನಿ ಸಂಭವಿಸಿದ್ದು, 250ಕ್ಕೂ ಹೆಚ್ಚು ಮನೆಗಳು ಕುಸಿದಿವೆ. 4 ಸಾವಿರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜಿಲ್ಲಾಡಳಿತ ಏಳು ಕಾಳಜಿ ಕೇಂದ್ರಗಳನ್ನು ತೆರೆದಿದ್ದು, 750ಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.