ಚನ್ನಪಟ್ಟಣ: ತಾಲ್ಲೂಕಿನ ಕೋಮನಹಳ್ಳಿ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಸರಕು ಸಾಗಣೆ ವಾಹನಕ್ಕೆ ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಬೆಂಗಳೂರಿನ ಬಗಲಗುಂಟೆ ಮುನಿಕೊಂಡಪ್ಪ ಲೇಔಟ್ನ ಸೋಮಯ್ಯ (73) ಹಾಗೂ ಅವರ ಪತ್ನಿ ಸರಸ್ವತಿ (65) ಮೃತ ದಂಪತಿ. ಕಾರು ಚಾಲನೆ ಮಾಡುತ್ತಿದ್ದ ಅವರ ಮಗ ಪವನ್ (35) ಗಂಭೀರವಾಗಿ ಗಾಯಗೊಂಡಿದ್ದು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮೂವರು ತಮ್ಮ ಸ್ವಂತ ಊರಾದ ಮಡಿಕೇರಿಗೆ ಕಾರಿನಲ್ಲಿ ಹೊರಟಿದ್ದರು. ಮುಂದೆ ಹೋಗುತ್ತಿದ್ದ ಸರಕು ಸಾಗಾಣೆ ವಾಹನ ಹಿಂದಿಕ್ಕಲು ಹೋಗಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಸೋಮಯ್ಯ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಸರಸ್ವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.