ADVERTISEMENT

ರಾಮನಗರ: ಅರ್ಥಪೂರ್ಣ ಸ್ವಾತಂತ್ರ‍್ಯ ದಿನಾಚರಣೆಗೆ ಶಾಸಕ ಇಕ್ಬಾಲ್ ಹುಸೇನ್ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 2:27 IST
Last Updated 8 ಆಗಸ್ಟ್ 2025, 2:27 IST
   

ರಾಮನಗರ: ಜಿಲ್ಲಾ ಕ್ರೀಡಾಂಗಣದಲ್ಲಿ ಆ. 15ರಂದು ಹಮ್ಮಿಕೊಂಡಿರುವ 79ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ‍್ಯ ದಿನ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಆಸನಗಳು, ಉತ್ತಮ ಮೈಕ್‌ಗಳ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮಕ್ಕೆ ನಿರಂತರ ವಿದ್ಯುತ್ ಪೂರೈಕೆಯಾಗಬೇಕು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ, ರಾಜ್ಯದ ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಶಾಸಕರು, ವಿಧಾನ ಪರಿಷತ್ ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಮಾತನಾಡಿ, ಸೇವಾ ದಳದವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಆಸನದ ವ್ಯವಸ್ಥೆ, ವೇದಿಕೆ ನಿರ್ಮಾಣ, ತಗ್ಗು ಗುಂಡಿಗಳಿದ್ದರೆ ಮುಚ್ಚುವುದು ಸೇರಿದಂತೆ ವಿವಿಧ ಕೆಲಸಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನಿರ್ವಹಿಸಬೇಕು ಎಂದು ಹೇಳಿದರು.

ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಧ್ವಜ ಖಾದಿ ಬಟ್ಟೆಯದ್ದೇ ಆಗಿರಬೇಕು. ಧ್ವಜಾರೋಹಣದ ಹಿಂದಿನ ದಿನವೇ ಈ ಬಗ್ಗೆ ತಾಲೀಮು ನಡೆಸಬೇಕು. ಧ್ವಜ ಸಂಹಿತೆಗೆ ಅಪಚಾರವಾಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸಬೇಕು. ಕಾರ್ಯಕ್ರಮದಲ್ಲಿ ನಾಡಗೀತೆ, ರೈತ ಗೀತೆಯನ್ನು ನುರಿತ ಕಲಾವಿದರಿಂದ ಹಾಡಿಸಬೇಕು. ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬರಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಲಾಲ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.