ಹಾರೋಹಳ್ಳಿ: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರ ವಿರೋಧದ ನಡುವೆ ಆರಂಭಗೊಂಡಿತು.
ವಿರೋಧವೇಕೆ: ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ರಾಜ್ಯದ 185 ಕಡೆ ಈ ವರ್ಷ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಹಸಿರು ನಿಶಾನೆ ತೋರಿಸಿದೆ. ಈ ಹಿನ್ನೆಲೆಯಲ್ಲಿ ಹಾರೋಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಗೆ ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ಜಾಗ ಸಹ ಗುರುತಿಸಲಾಗಿದೆ. ಅಲ್ಲದೇ ಕಾಮಗಾರಿ ಆರಂಭಿಸಲು ಸ್ಥಳೀಯ ಶಾಸಕ ಇಕ್ಬಾಲ್ ಹುಸೇನ್ ಭೂಮಿ ಪೂಜೆ ಕೂಡ ನೆರವೇರಿಸಿದ್ದಾರೆ. ಆದರೆ, ಎಸ್ಡಿಎಂಸಿ ಸದಸ್ಯರು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶದಂತೆ ಈಗಾಗಲೇ ಜಾಗ ಗುರುತಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಸರ್ಕಾರಿ ಬಸ್ ನಿಲ್ದಾಣ, ತಾಲ್ಲೂಕು ಕಚೇರಿ ಸೇರಿದಂತೆ ಎಲ್ಲವೂ ಹತ್ತಿರದಲ್ಲಿದೆ. ಹಾಗಾಗಿ ಕೆ.ಪಿ.ಎಸ್ ಶಾಲೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರೆ ಮಕ್ಕಳಿಗೂ ಸಹ ಅನುಕೂಲವಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎನ್ನುತ್ತಾರೆ ಹಾರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ.
ಶಾಲಾ ಜಾಗ ಉಳಿಸುವ ಸಲುವಾಗಿ ಹೋರಾಟ ನಡೆದಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ ಎನ್ನುತ್ತಾರೆ ಪೋಷಕ ರವಿ ಗಿರೇನಹಳ್ಳಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.