ಚನ್ನಪಟ್ಟಣ: ಸಾಕಷ್ಟು ಅಪರಾಧ ಪ್ರಕರಣಗಳಲ್ಲಿ ಮಾದಕ ವ್ಯಸನಿಗಳು ಭಾಗಿಯಾಗುತ್ತಿದ್ದಾರೆ . ಈ ಕುರಿತು ಎಚ್ಚರ ವಹಿಸುವುದು ಅವಶ್ಯ ಎಂದು ಪುರ ವ್ಯಾಪ್ತಿಯ ಸರ್ಕಲ್ ಇನ್ ಸ್ಪೆಕ್ಟರ್ ಗೋವಿಂದರಾಜು ಸಲಹೆ ನೀಡಿದರು.
ಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಮೆಡಿಕಲ್ ಸ್ಟೋರ್ ಮಾಲೀಕರಿಗೆ ನಡೆದ ತಿಳಿವಳಿಕೆ ಸಭೆಯಲ್ಲಿ ಮಾತನಾಡಿದ ಅವರು,ಕೆಲ ಮೆಡಿಕಲ್ ಸ್ಟೋರ್ಗಳಲ್ಲಿ ಮಾದಕ ವಸ್ತುಗಳು ಸಿಗುತ್ತವೆ ಎಂಬ ಆರೋಪ ಕೇಳಿ ಬಂದಿದೆ. ಇದರ ಬಗ್ಗೆ ಎಚ್ಚರಿಕೆ ಅವಶ್ಯ. ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಅಪರಾಧ ಎಂದರು.
ಅಪರಾಧ ಪ್ರಕರಣಗಳನ್ನು ನಿಯಂತ್ರಣ ಮಾಡಲು ಪೊಲೀಸರ ಜತೆ ಮೆಡಿಕಲ್ ಸ್ಟೋರ್ ಮಾಲೀಕರು ಕೂಡ ಕೈಜೋಡಿಸಬೇಕು ಎಂದು ಹೇಳಿದರು.
ಸಂಚಾರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮಾತನಾಡಿ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ತರ ಜವಾಬ್ದಾರಿ ಹೊತ್ತಿರುವ ಮೆಡಿಕಲ್ ಸ್ಟೋರ್ ಮಾಲೀಕರು ಅಪರಾಧ ಪ್ರಕರಣಗಳನ್ನು ನಿಯಂತ್ರಣ ಮಾಡಲು ಪೊಲೀಸರಿಗೆ ನೆರವಾಗಬೇಕು ಎಂದು ತಿಳಿಸಿದರು.
ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಗಂಗಾಧರ್, ಮೆಡಿಕಲ್ ಸ್ಟೋರ್ ಯೂನಿಯನ್ ಅಧ್ಯಕ್ಷ ಪ್ರಕಾಶ್ ಹಾಗೂ ಮೆಡಿಕಲ್ ಸ್ಟೋರ್ ಮಾಲೀಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.