ADVERTISEMENT

ಜೆಜೆಎಂ ಗುತ್ತಿಗೆದಾರರಿಗೆ ದಂಡ ವಿಧಿಸಿ: ಸಂಸದ ಸಿ.ಎನ್. ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 2:40 IST
Last Updated 3 ಸೆಪ್ಟೆಂಬರ್ 2025, 2:40 IST
<div class="paragraphs"><p>ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿದರು. </p></div>

ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿದರು.

   

ರಾಮನಗರ: ‘ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ನಡೆಯುತ್ತಿರುವ 984 ಕಾಮಗಾರಿಗಳ ಪೈಕಿ, 252 ಯೋಜನೆಗಳು ಹರ್ ಘರ್ ಜಲ್ ಯೋಜನೆಗಳು ಎಂದು ಘೋಷಿಸಲಾಗಿದೆ. 475 ಕಾಮಗಾರಿಗಳು ಇನ್ನೂ ಪ್ರಕ್ರಿಯೆಯಲ್ಲಿವೆ. ಕಾಮಗಾರಿಗಳನ್ನು ವಿಳಂಬ ಮಾಡಿರುವ ಗುತ್ತಿಗೆದಾರರಿಗೆ ದಂಡ ವಿಧಿಸಿ’ ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲುಗುತ್ತಿಗೆದಾರರಿಗೆ ಸೂಚಿಸಬೇಕು. ತಪ್ಪಿದ್ದಲ್ಲಿ ಅವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಬೇಕು’ ಎಂದರು.

ADVERTISEMENT

‘ಕಾಮಗಾರಿ ಪ್ರಗತಿ ಕುರಿತು, ತಾಲ್ಲೂಕು ವ್ಯಾಪ್ತಿಯಲ್ಲಿ ಸಭೆ ಕರೆಯಬೇಕು. ಸಭೆಗೆ ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರನ್ನು ಆಹ್ವಾನಿಸಬೇಕು’ ಎಂದು ನಿರ್ದೇಶನ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಎಂಜಿನಿಯರ್, ‘ಕಾಮಗಾರಿ ವಿಳಂಬಕ್ಕಾಗಿ 208 ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ’ ಎಂದು ಹೇಳಿದರು.

‘ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ವೈದ್ಯರ ಹುದ್ದೆಗಳು ಖಾಲಿ ಇವೆ. ಜಿಲ್ಲೆಯಲ್ಲಿ ಎನ್.ಎಚ್.ಎಂ ಯೋಜನೆಯಡಿ ಅನಸ್ತೇಶಿಯ, ಆರ್ಥೋಪೆಡಿಕ್ ಇತರೆ ವಿಭಾಗಗಳಲ್ಲಿ ವೈದ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ನೇಮಕ ಮಾಡಿಕೊಂಡು ಸಾರ್ವಜನಿಕರ ಸೇವೆಗೆ ನಿಯೋಜಿಸಬೇಕು’ ಎಂದು ತಿಳಿಸಿದರು.

‘ಜಿಲ್ಲಾಸ್ಪತ್ರೆಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ರಾಜ್ಯ ಸರ್ಕಾರ ಪೂರೈಸಲಿದೆ. ಇಕೋ ಹಾಗೂ ಅಲ್ಟ್ರಾಸೌಂಡ್ ಯಂತ್ರಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಬೇಕು. ಆಸ್ಪತ್ರೆಗೆ ಅಗತ್ಯವಿರುವ ಸ್ಟಾಫ್ ನರ್ಸ್ ಹುದ್ದೆಗಳನ್ನು ಎನ್.ಎಚ್.ಎಂ ಯೋಜನೆಯಡಿಗೆ ನೇಮಿಸಿಕೊಳ್ಳಬೇಕು’ ಎಂದು ಸೂಚನೆ ನೀಡಿದರು.

‘ಆರ್‌ಬಿಐ ಮಾರ್ಗಸೂಚಿಗಳು ಬದಲಾವಣೆಯಾಗಿದ್ದು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಫಲಾನುಭವಿಗಳ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ. 10 ದಿನಗಳೊಳಗೆ ಸಾಲ ಪ್ರಕ್ರಿಯೆಗೆ ಕ್ರಮ ವಹಿಸಬೇಕು. ಮೈಕ್ರೊ ಫೈನಾನ್ಸ್ ಕಿರುಕುಳ ಕಂಡುಬಂದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ ಇದ್ದರು. ದಿಶಾ ಸಮಿತಿ ಸಭೆಯ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಸ್ಥಳೀಯ ಉಗ್ರಾಣ ನಿರ್ಮಾಣಕ್ಕೆ ಸೂಚನೆ

‘ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ರಾಗಿ ಖರೀದಿ ಮಾಡಿ ಅದನ್ನು ಆನೇಕಲ್‌ನಲ್ಲಿ ಶೇಖರಿಸಿಡಲಾಗಿದೆ. ಇದನ್ನು ತಪ್ಪಿಸಬೇಕಾದರೆ ಜಿಲ್ಲೆಯಲ್ಲಿಯೇ ಉಗ್ರಾಣ ಸ್ಥಾಪಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸಂಸದರು ಸೂಚಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ‘ಉಗ್ರಾಣಕ್ಕೆ ಅಗತ್ಯವಿರುವ ಜಾಗವನ್ನು ಒದಗಿಸಿ ಕೊಡುವೆ. ಉಗ್ರಾಣ ನಿಗಮದ ಅಧಿಕಾರಿಗಳು ಅದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ನಡೆಸಬೇಕು’ ಎಂದು ತಿಳಿಸಿದರು.

‘ಬೆಳೆನಷ್ಟ ಅನುಭವಿಸುವ ರೈತರಿಗೆ ಆಸರೆಯಾಗಲು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತಂದಿದೆ. ರೈತರು ನೋಂದಣಿ ಮಾಡಿಸಿಕೊಂಡು ವಿಮೆಯ ಪ್ರಯೋಜನ ಪಡೆಯಬೇಕು. ವಿಮೆ ಬಗ್ಗೆ ಕೃಷಿ ಇಲಾಖೆಯು ವ್ಯಾಪಕವಾದ ಪ್ರಚಾರ ಹಾಗೂ ಜಾಗೃತಿ ಮೂಡಿಸಬೇಕು. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ರೈತರು ಈ ಯೋಜನೆಯ ಫಲಾನುಭವಿಗಳಾಗುವಂತೆ ಕ್ರಮ ವಹಿಸಬೇಕು. ಅಂತರ್ಜಲ ವೃದ್ಧಿಗೆ ಪೂರಕವಾಗಿ ರೈತರು ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ಇಲಾಖೆಯು ರೈತರಿಗೆ ಪ್ರೋತ್ಸಾಹ ನೀಡಬೇಕು’ ಎಂದು ಸಂಸದರು ಸಲಹೆ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮುನೇಗೌಡ ‘2023-24ನೇ ಸಾಲಿಗೆ 11524 ರೈತರು ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಮೆಯ ₹23.43 ಕೋಟಿ ಅನುದಾನ ನೇರವಾಗಿ ರೈತರ ಖಾತೆಗೆ ಬಿಡುಗಡೆಯಾಗಿದೆ. 2025-26ನೇ ಸಾಲಿನಲ್ಲಿ ಸಾಕಷ್ಟು ರೈತರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ’ ಎಂದರು.

ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ಚನ್ನಪಟ್ಟಣದ ಮಂಚನಾಯಕನಹಳ್ಳಿ ಬಳಿ ಪಾದಚಾರಿ ಮೇಲ್ಸೇತುವೆಯ ಅಗತ್ಯವಿದೆ. ಎನ್‌ಎಚ್‌ಎಐ ಈ ಕುರಿತು ಕ್ರಮ ಕೈಗೊಳ್ಳಬೇಕು. ಟೋಲ್ ಪ್ಲಾಜಾದಲ್ಲಿ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು
– ಡಾ. ಸಿ.ಎನ್. ಮಂಜುನಾಥ್, ಸಂಸದ
ರಾಮನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.