ADVERTISEMENT

‘ಕೆರೆ ತುಂಬಿಸುವ ಯೋಜನೆ ದೇಶಕ್ಕೆ ಮಾದರಿ’

ಕೇಂದ್ರ ಜಲಶಕ್ತಿ ಅಭಿಯಾನ ತಂಡದಿಂದ ಜಿಲ್ಲೆಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 13:53 IST
Last Updated 15 ಜುಲೈ 2019, 13:53 IST
ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾರತ ಸರ್ಕಾರದ ಜಲಶಕ್ತಿ ಅಭಿಯಾನದ ಜಿಲ್ಲಾ ಉಸ್ತುವಾರಿ ಯೋಗಿತಾ ಸ್ವರೂಪ್ ಮಾತನಾಡಿದರು
ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಭಾರತ ಸರ್ಕಾರದ ಜಲಶಕ್ತಿ ಅಭಿಯಾನದ ಜಿಲ್ಲಾ ಉಸ್ತುವಾರಿ ಯೋಗಿತಾ ಸ್ವರೂಪ್ ಮಾತನಾಡಿದರು   

ರಾಮನಗರ: ಅಂತರ್ಜಲ ಹೆಚ್ಚಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಾದರಿಯನ್ನು ದೇಶಾದಾದ್ಯಂತ ವಿಸ್ತರಿಸಲು ಪ್ರಸ್ತಾವ ಸಲ್ಲಿಸಲಾಗುವುದು ಎಂದು ಕೇಂದ್ರ ಜಲಶಕ್ತಿ ಅಭಿಯಾನದ ಜಿಲ್ಲಾ ಉಸ್ತುವಾರಿ ಯೋಗಿತಾ ಸ್ವರೂಪ್ ಹೇಳಿದರು.

ಭಾರತ ಸರ್ಕಾರ ಜಲ ಭದ್ರತೆಗಾಗಿ ಜಲಶಕ್ತಿ ಅಭಿಯಾನವನ್ನು ಇದೇ 1ರಿಂದ ಸೆಪ್ಟೆಂಬರ್ 15ರ ವರೆಗೆ ಮೊದಲ ಹಂತದಲ್ಲಿ ಕೈಗೊಂಡಿದ್ದು, ಈ ಆಂದೋಲನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಏತ ನೀರಾವರಿ ಯೋಜನೆಗಳ ಮಾಹಿತಿ ಪಡೆದ ಅವರು ‘ಪಾರಂಪರಿಕ ಜಲಮೂಲಗಳಾದ ಕೆರೆ, ಬಾವಿ, ನದಿಗಳ ರಕ್ಷಣೆ, ಜಲರಕ್ಷಣೆ, ಜಲ ಮರುಪೂರಣ ಹಾಗೂ ಅರಣ್ಯೀಕರಣ ಮಾಡುವುದು ಜಲಶಕ್ತಿ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅಂತರ್ಜಲ ಹೆಚ್ಚಿಸಲು ಅತಿಹೆಚ್ಚು ಸಹಕಾರಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜಲಾಮೃತ ಯೋಜನೆಯಡಿ ಕರೆಕಟ್ಟೆಗಳಲ್ಲಿರುವ ಹೂಳು ತೆಗೆಸಿ ಕೆರೆ ಬದುಗಳಲ್ಲಿ ಸಸಿಗಳನ್ನು ನೆಟ್ಟು ಹಸರೀಕರಣಗೊಳಿಸುವುದು. ಜಲ ಸಾಕ್ಷರತೆ, ಜಲ ಪುನಃಶ್ಚೇತನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ADVERTISEMENT

ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 1716 ಮಲ್ಟಿ ಆರ್ಚ್ ಚೆಕ್ ಡ್ಯಾಂ, ಕೃಷಿ ಹೊಂಡ ನಿರ್ಮಾಣ, ಕೊಳವೆ ಬಾವಿ ಮರು ಪೂರ್ಣ, ನರೇಗಾ ಮೂಲಕ 256 ಕೆರೆಗಳ ಅಭಿವೃದ್ಧಿ, ಖಾಸಗಿ ಸಂಸ್ಥೆಗಳ ಸಾಮಾಜಿಕ ಸೇವಾ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಹಾಗೂ ಅರಣ್ಯೀಕರಣ ಕುರಿತಂತೆ ಮಾಹಿತಿ ಪಡೆದ ಅವರು, ಜಲಶಕ್ತಿ ಆಂದೋಲನ ಕುರಿತಂತೆ ಕ್ರಿಯಾಯೋಜನೆ ತಯಾರಿಸಿ ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಜಲ ಸಂರಕ್ಷಣೆ ಕುರಿತು ಅನುಷ್ಠಾನಗೊಳಿಸಿರುವ ಕಾಮಗಾರಿಗಳನ್ನು ವೀಕ್ಷಿಸಿತು.

ಭಾರತ ಸರ್ಕಾರದ ಕೃಷಿ ಸಚಿವಾಲಯದ ಉಪ ಕಾರ್ಯದರ್ಶಿ ರಾಜೇಶ್ ಜೈಸ್ವಾಲ್, ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ. ರಾಜೇಂದ್ರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಎನ್. ನಾಗರಾಜ್, ಉಪಾಧ್ಯಕ್ಷೆ ವೀಣಾ ಕುಮಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.