ADVERTISEMENT

ರಾಜ್ಯಾದ್ಯಂತ ಜೆಡಿಎಸ್ ಸದಸ್ಯತ್ವ ಅಭಿಯಾನ: ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 15:30 IST
Last Updated 24 ಜೂನ್ 2025, 15:30 IST
ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿದ್ದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು   

ಚನ್ನಪಟ್ಟಣ: ರಾಜ್ಯಾದ್ಯಂತ ಜೆಡಿಎಸ್ ಪಕ್ಷವನ್ನು ಬಲಪಡಿಸಲು ಜೆಡಿಎಸ್ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದ್ದು, ಅತಿ ಹೆಚ್ಚು ಸದಸ್ಯತ್ವ ಮಾಡಿಸುವ ಮೂಲಕ ನನಗೆ ಹೆಚ್ಚಿನ ಶಕ್ತಿ ನೀಡಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ತಾಲ್ಲೂಕಿನ ಕೂಡ್ಲೂರು ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ಮಂಗಳವಾರ ತಾಲ್ಲೂಕು ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಸದಸ್ಯತ್ವ ನೋಂದಣಿಯಾಗಿದೆ. ಎರಡು ದಿನ ರಾಮನಗರ ಜಿಲ್ಲೆಯಲ್ಲಿ ನೋಂದಣಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಆರಂಭ ಮಾಡುತ್ತೇವೆ ಎಂದರು.

ಈಗಾಗಲೇ ಅತೀ ಹೆಚ್ಚು ಸದಸ್ಯತ್ವ ಪಡೆದುಕೊಂಡಿರುವ ಮೊದಲ ಹತ್ತು ಕ್ಷೇತ್ರಗಳಲ್ಲಿ ಚನ್ನಪಟ್ಟಣ, ರಾಮನಗರ ಹಾಗೂ ಮಾಗಡಿ ಇವೆ. ಇದು ಸಂತೋಷದ ವಿಚಾರ. ಜಿಲ್ಲೆಯಲ್ಲಿ ಜೆಡಿಎಸ್ ಭದ್ರವಾಗಿದೆ. ಆದರೆ ಕೆಲವು ಸಮಸ್ಯೆಗಳಿವೆ, ಅವುಗಳನ್ನು ಸರಿಪಡಿಸಿ ಪಕ್ಷ ಬಲಗೊಳಿಸುತ್ತೇನೆ ಎಂದರು.

ADVERTISEMENT

ಚನ್ನಪಟ್ಟಣ ಕ್ಷೇತ್ರದ ಕಳೆದ ಉಪಚುನಾವಣೆ ನಮಗೆ ಅನಿರೀಕ್ಷಿತವಾಗಿತ್ತು. ಕ್ಷೇತ್ರದ ಎಲ್ಲಾ ಮುಖಂಡರು, ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂದುಕೊಂಡು ಕೆಲಸ ಮಾಡಿದ್ದೀರಿ. ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ನಮಗೆ ಸೋಲಾಗಿದೆ. ಅದರಿಂದ ಧೃತಿಗೆಡುವುದು ಬೇಡ. ಸೋತೆನೆಂದು ಕ್ಷೇತ್ರ ಬಿಡುವ ವ್ಯಕ್ತಿ ನಾನಲ್ಲ. ಈಗಾಗಲೇ ಚನ್ನಪಟ್ಟಣದಲ್ಲಿ ಕಚೇರಿ ಆರಂಭಿಸಲು ಸಿದ್ಧತೆ ಮಾಡಲಾಗಿದೆ. ಜೊತೆಗೆ ಕಾರ್ಯಕರ್ತರ ಸಮಸ್ಯೆ, ಅಹವಾಲು ಆಲಿಸಲು ನಿವೃತ್ತ ಕೆಎಎಸ್ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೆಚ್ಚಿನ ಒತ್ತಡ ಇತ್ತು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡಿದೆ. ಆದರೆ, ಸರ್ಕಾರದ ಕುತಂತ್ರದಿಂದ ನಾನು ಸೋಲು ಅನುಭವಿಸಬೇಕಾಯಿತು. ಅದಕ್ಕಾಗಿ ಕಾರ್ಯಕರ್ತರು ಚಿಂತಿಸುವ ಅಗತ್ಯವಿಲ್ಲ. ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದರು.

ಪಕ್ಷದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಮ್ಯಾ ರಾಮಣ್ಣ ಮಾತನಾಡಿ, ಕಳೆದ ಉಪಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಮ್ಮ ಪಕ್ಷಕ್ಕೆ ಸೋಲಾಗಿದೆ. ಚಿಂತೆ ಬೇಡ. ಮುಂದಿನ ಚುನಾವಣೆಗೆ ಸಜ್ಜಾಗೋಣ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಈಗಿನಿಂದಲೇ ತಯಾರಿ ನಡೆಸೋಣ. ಪಕ್ಷ ಸಂಘಟನೆಗೆ ದುಡಿಯುತ್ತಿರುವ ನಿಖಿಲ್ ಅವರಿಗೆ ಸಾತ್ ನೀಡೋಣ ಎಂದರು.

ಬೈಕ್ ಜಾಥಾ: ಕಾರ್ಯಕ್ರಮಕ್ಕೂ ಮೊದಲು ನಿಖಿಲ್ ಕುಮಾರಸ್ವಾಮಿ ಅವರು ನಗರದ ಸಾತನೂರು ಸರ್ಕಲ್‌ನಿಂದ ಕೂಡ್ಲೂರಿನವರೆಗೆ ಪಕ್ಷದ ನೂರಾರು ಕಾರ್ಯಕರ್ತರ ಜೊತೆಗೂಡಿ ಬೈಕ್ ಜಾಥಾ ನಡೆಸಿದರು. ಪಕ್ಷದ ಕಾರ್ಯಕರ್ತರು ನಗರ, ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪಕ್ಷದ ಬಾವುಟ ಹಿಡಿದು, ಜೈಕಾರ ಕೂಗುತ್ತಾ ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು, ಮುಖಂಡರಾದ ಹಾಪ್ ಕಾಮ್ಸ್ ದೇವರಾಜು, ಪ್ರಸನ್ನ, ಗರಕಹಳ್ಳಿ ಕೃಷ್ಣೇಗೌಡ, ಯಾಲಕ್ಕಿಗೌಡ, ನಿಡಗೋಡಿ ಬಾಬು, ಇಗ್ಗಲೂರು ಕುಮಾರ್ ಇತರರು ಹಾಜರಿದ್ದರು.

ಕಾರ್ಯಕ್ರಮಕ್ಕೂ ಮುನ್ನಾ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನೂರಾರು ಕಾರ್ಯಕರ್ತರ ಜೊತೆ ಬೈಕ್ ರ್‍ಯಾಲಿ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.