ಕನಕಪುರ: ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಸ ಜಯಂತಿಗೆ ಅಧಿಕಾರಿಗಳು ಗೈರು ಹಾಜರಿಯಾಗಿದ್ದನ್ನು ವಿವಿಧ ಸಂಘಟನೆಗಳ ಮುಖಂಡರು ಖಂಡಿಸಿದ್ದಾರೆ.
ಅಧಿಕಾರಿಗಳು ಗೈರು ಹಾಜರಾಗುವ ಮೂಲಕ ನಿರ್ಲಕ್ಷ್ಯ ತೋರಿದ್ದಾರೆ.ಈ ಧೋರಣೆ ಬದಲಾಗಬೇಕು ಎಂದು ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
ಸರ್ಕಾರ ಆಚರಣೆ ಮಾಡುವ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಪೂರ್ವಭಾವಿಸಭೆ ನಡೆಸುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಸಹಕಾರ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರ ಹಮ್ಮಿಕೊಳ್ಳುವ ಜಯಂತಿ, ಕಾರ್ಯಕ್ರಮಗಳಿಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿ ವರ್ತನಗೆ ಕಾರಣ ಎಂದರು.
ಮುಂದಿನ ದಿನಗಳಲ್ಲಿ ನಡೆಯುವ ಜಯಂತಿ, ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಸಂಬಂಧಪಟ್ಟ ಸಮುದಾಯದವರಿಗೆ, ಸಂಘಟನೆಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲೂ ಪ್ರತಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಳ್ಳುವಂತೆ ಮುಂಚಿತವಾಗಿ ನೊಟೀಸ್ ನೀಡಿರುತ್ತೇವೆ. ಮುಂದೆ ಕಡ್ಡಾಯವಾಗಿ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಲಾಗುವುದು ಎಂದು ಗ್ರೇಡ್ -2 ತಹಶೀಲ್ದಾರ್ ಶಿವಕುಮಾರ್ ಭರವಸೆ ನೀಡಿದರು.
ಸಾಹಿತಿಗಳಾದ ಎಲ್ಲೇಗೌಡ ಬೆಸಗರಹಳ್ಳಿ, ಕೂ.ಗಿ.ಗಿರಿಯಪ್ಪ, ಎ.ಪಿ.ಕೃಷ್ಣಪ್ಪ,ಸಂಘಟನೆಗಳ ಮುಖಂಡರಾದ ಕುಮಾರ ಸ್ವಾಮಿ, ಮಲ್ಲಿಕಾರ್ಜುನ್, ಆನಂದ್ ಪೈ, ವೀರೇಶ್ ಮುಂತಾದವರು ಬಸವಣ್ಣನವರ ಆಚಾರ, ವಿಚಾರಗಳ ಬಗ್ಗೆ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.