ಕನಕಪುರ: ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವುದಾಗಿಸಂಸದ ಡಿ.ಕೆ.ಸುರೇಶ್ ಹೇಳಿದರು.
ದ್ಯಾವಸಂದ್ರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಹಿರಿಯರು ಗ್ರಾಮಕ್ಕೊಂದು ಕೆರೆ ಕಟ್ಟಿಸುವ ಮೂಲಕ ಹಿರಿಯರು ನೀರಿನ ಸಂಗ್ರಹಣೆಗೆ ಮತ್ತು ವ್ಯವಸಾಯಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದರು. ಇದರಿಂದ ತಾಲ್ಲೂಕಿನಲ್ಲಿ ಅಂತರ್ಜಲವೂ ಹೆಚ್ಚಿತ್ತು. ಇತ್ತೀಚಿನ ದಿನಗಳಲ್ಲಿ ಕೆರೆಗಳಿಗೆ ಸಂಪರ್ಕ ಕಲ್ಪಿಸುವ ಮಳೆ ನೀರಿನಕಾಲುವೆಗಳು, ಹಳ್ಳಗಳು ಮುಚ್ಚಿಹೋಗಿವೆ. ಮಳೆಬಿದ್ದರೂ ನೀರು ಕೆರೆಗೆ ಹೋಗದೆ ವ್ಯರ್ಥವಾಗುತ್ತಿದೆ ಎಂದರು.
ಅಂತರ್ಜಲ ಕುಸಿದಿದ್ದು, 1,000ಅಡಿ ಕೊಳವೆ ಬಾವಿ ಕೊರೆಯಿಸಿದರೂ ನೀರು ಸಿಗುತ್ತಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ದೂರ ಮಾಡಬೇಕಾದರೆ ಮತ್ತೆ ನಾವು ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿಇಒಟಿ.ಎಸ್. ಶಿವರಾಮ್ ಮಾತನಾಡಿ, ರೈತರು ಕೃಷಿ ಚಟುವಟಿಕೆ ಮಾಡಲು ಶಾಶ್ವತ ನೀರಾವರಿ ಸೌಲಭ್ಯ ಹೊಂದಿರಬೇಕು. ಕೆರೆಗಳಿಗೆ ನೀರು ಪೂರಣಗೊಳಿಸುವ ಯೋಜನೆಗೆ ಸಿದ್ದತೆ ನಡೆಸಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಕೆ.ನಾಗರಾಜು, ತಾಲ್ಲೂಕು ಪಂಚಾಯಿತಿ ಸದಸ್ಯ ಕಂಠಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಪಿಡಿಒ ರಾಜೇಶ್ವರಿ, ಮುಖಂಡರಾದ ಈಶ್ವರ್, ಮಹದೇವಯ್ಯ, ರವಿ, ರುದ್ರೇಶ್, ನೀರಾವರಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.