ಮಾಗಡಿ: ಆ. 13ರಂದು ಮಂಗಳವಾರ ಮಾಗಡಿ ತಾಲ್ಲೂಕಿಗೆ ಬರುವ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ ಕೋರಲು ಎಲ್ಲರ ಸಹಕಾರ ಮುಖ್ಯ ಎಂದು ತಹಶೀಲ್ದಾರ್ ಶರತ್ ಕುಮಾರ್ ಮನವಿ ಮಾಡಿದರು.
ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ನೆಲಮಂಗಲ ತಾಲ್ಲೂಕಿನಿಂದ ಕನ್ನಡ ಜ್ಯೋತಿ ರಥಯಾತ್ರೆ ಮಾಗಡಿ ಗಡಿಭಾಗವಾದ ಗುಡೇಮಾರನಹಳ್ಳಿಗೆ ಬರುವುದರಿಂದ ಅಲ್ಲಿ ನಾವು ಸ್ವಾಗತ ಮಾಡಿ ನಂತರ ಎನ್ಇಎಸ್ ವೃತ್ತದ ಬಳಿ ಕಲಾತಂಡ ಹಾಗೂ ಶಾಲಾ ಮಕ್ಕಳಿಂದ ಅದ್ದೂರಿಯಾಗಿ ಪೂರ್ಣಕುಂಭ ಸ್ವಾಗತ ಮಾಡಬೇಕು. ಕನ್ನಡ, ಕರ್ನಾಟಕದ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ನಾಡುನುಡಿಗೆ ಸಂಬಂಧಿಸಿದ ಹಾಗೂ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ಅರಿವು ಮೂಡಿಸುವ ಈ ಮಹತ್ವದ ಕನ್ನಡ ಜ್ಯೋತಿ ಯಾತ್ರೆಯನ್ನು ಪಟ್ಟಣ ಹಾಗೂ ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಈ ಜ್ಯೋತಿ ಯಾತ್ರೆಯನ್ನು ಬರಮಾಡಿಕೊಳ್ಳುವ ಮತ್ತು ಬೀಳ್ಕೊಡುವ ವ್ಯವಸ್ಥೆಯನ್ನು ಸಾರ್ವಜನಿಕರು, ಜನಪ್ರತಿನಿಧಿಗಳು, ಸಾಹಿತಿಗಳು, ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳು, ಸ್ವಾತಂತ್ರ್ಯ ಹೋರಾಟಗಾರರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಒಟ್ಟುಗೂಡಿ ಮಾಡಬೇಕು’ ಎಂದು ತಿಳಿಸಿದರು.
ತಾ.ಪಂ ಇಒ ಜಯಪಾಲ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪದ್ಮನಾಭ, ಮುಖಂಡರಾದ ಮಾಡಬಾಳ್ ಜಯರಾಂ, ಕಲ್ಕರೆ ಶಿವಣ್ಣ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ, ವಲಯ ಅರಣ್ಯಾಧಿಕಾರಿ ಚೈತ್ರ, ಸಮಾಜಕಲ್ಯಾಣ ಅಧಿಕಾರಿ ಪ್ರಕಾಶ್, ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಬಸವಣ್ಣ, ರೈತ ಸಂಘದ ಶಿವಲಿಂಗಯ್ಯ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.