ರಾಮನಗರ: ‘ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿರುವ ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಾರ್ಚ್ 21 ಮತ್ತು 22ರಂದು ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದರು.
‘ರಾಮನಗರದ ಕೆಂಪೇಗೌಡ ವೃತ್ತದಿಂದ ಶುರುವಾಗಲಿರುವ ಪಾದಯಾತ್ರೆಯು ಎರಡು ದಿನದಲ್ಲಿ ಬೆಂಗಳೂರು ತಲುಪಲಿದೆ. ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ಹಕ್ಕೊತ್ತಾಯ ಮಾಡಲಾಗುವುದು’ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭಾ ಚುನಾವಣೆಗೂ ಮುಂಚೆ ಯೋಜನೆ ಜಾರಿಗಾಗಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ನಂತರ ಅವರದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಇದುವರೆಗೆ ಯೋಜನೆ ಜಾರಿ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಯೋಜನೆಗೆ ಇಂಡಿಯಾ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ತಮಿಳುನಾಡಿನ ಡಿಎಂಕೆ ಸರ್ಕಾರ ಚಕಾರ ಎತ್ತಿದೆ. ಆ ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತ್ಮೀಯತೆ ಹೊಂದಿದ್ದಾರೆ. ಹಾಗಾಗಿ, ಯೋಜನೆಯ ಅಗತ್ಯ ಕುರಿತು ಅವರಿಗೆ ಮನವೊಲಿಕೆ ಮಾಡಿಕೊಟ್ಟು ಚಾಲನೆ ನೀಡಬೇಕು’ ಎಂದು ಒತ್ತಾಯಿಸಿದರು.
‘ಕುಡಿಯುವ ನೀರಿನ ಸಮಸ್ಯೆಗೆ ಧೀರ್ಘಾವಧಿ ಪರಿಹಾರವಾಗಿರುವ ಯೋಜನೆಯ ಜಾರಿಗೆ ರಾಜ್ಯದ ಎಲ್ಲಾ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಒಂದಾಗಿ ಪ್ರಯತ್ನ ಮಾಡಬೇಕು. ಕೇಂದ್ರದಲ್ಲಿ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ, ಸ್ಥಳೀಯ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಸೇರಿದಂತೆ ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸದರು ಸಹ ಯೋಜನೆ ಜಾರಿಗೆ ಒತ್ತಡ ಹಾಕಬೇಕು’ ಎಂದು ಆಗ್ರಹಿಸಿದರು.
‘ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದೆ. ಅದಕ್ಕೆ ಶಿವಸೇನೆ ಸಹ ಕುಮ್ಮಕ್ಕು ಕೊಡುತ್ತಿದೆ. ರಾಜ್ಯ ಸರ್ಕಾರ ಕನ್ನಡಿಗರ ಮೇಲೆ ನಡೆಯುತ್ತಿರುವ ಮರಾಠಿಗರ ದೌರ್ಜನ್ಯ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು. ಕನ್ನಡಿಗರು ಹಾಗೂ ಮರಾಠಿಗರ ನಡುವಿನ ಸೌಹಾರ್ದದ ವಾತಾವರಣವನ್ನು ಕಲಕುತ್ತಿರುವವರನ್ನು ಗಡಿಪಾರು ಮಾಡಬೇಕು’ ಎಂದರು.
ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಎನ್.ಆರ್. ರಾಜು ಮಾತನಾಡಿ, ‘ಮಾಚ್ 21ರಂದು ಕೆಂಪೇಗೌಡ ವೃತ್ತದಲ್ಲಿರುವ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ವೇದಿಕೆಯ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.
ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಿವರಾಜಗೌಡ, ಮುಖಂಡರಾದ ಮಂಜೇಶ್ ಗೌಡ, ಜಗದೀಶ್ ಗೌಡ, ಆರ್.ಬಿ.ಎಲ್. ಲೋಕೇಶ್, ನಾಗರಾಜು, ಪ್ರದೀಪ್ ಗೌಡ, ಹರೀಶ್, ಮಹೇಶ್ ಗೌಡ, ವಿನೋದ್ ರಾಜ್, ಕಾರ್ತಿಕ್, ಮಹಾಲಿಂಗ, ಸಾಗರ, ಕಿರಣ್, ವಿನೋದ್ ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.