ADVERTISEMENT

ಶಿವಕುಮಾರ್‌ಗೂ ಸಿದ್ದರಾಮಯ್ಯ ಅವಕಾಶ ನೀಡಲಿ–ಶಾಸಕ ಎಚ್.ಎ.ಇಕ್ಬಾಲ್ ಹುಸೇನ್

ಮುಖ್ಯಮಂತ್ರಿ ಬದಲಾವಣೆ ಚರ್ಚೆ‌: ಡಿಸಿಎಂ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 6:26 IST
Last Updated 13 ಫೆಬ್ರುವರಿ 2026, 6:26 IST
ಎಚ್.ಎ. ಇಕ್ಬಾಲ್ ಹುಸೇನ್, ಶಾಸಕ
ಎಚ್.ಎ. ಇಕ್ಬಾಲ್ ಹುಸೇನ್, ಶಾಸಕ   

ರಾಮನಗರ: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯಮಂತ್ರಿಯಾಗಲು ಪಕ್ಷದ ಹೈಕಮಾಂಡ್ ಈ ಸಲ ಅವಕಾಶ ನೀಡಲಿದೆ. ಅದೇ ಕಾರಣಕ್ಕೆ ವರಿಷ್ಠರು ಶಿವಕುಮಾರ್ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದಾರೆ. ಇಲ್ಲಿವರೆಗೆ ಉತ್ತಮ ಆಡಳಿತ ಕೊಟ್ಟಿರುವ ಸಿದ್ದರಾಮಯ್ಯ ಅವರು, ಶಿವಕುಮಾರ್‌ ಅವರಿಗೂ ಅವಕಾಶ ಮಾಡಿಕೊಡಬೇಕು’ ಎಂದು ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಒತ್ತಾಯಿಸಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಗುರುವಾರ ತಮ್ಮ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಪಕ್ಷಕ್ಕೆ ಶಿವಕುಮಾರ್ ಕೊಡುಗೆ ಕುರಿತು ಹೈಕಮಾಂಡ್‌ಗೆ ಅರಿವಿದೆ. ಅದಕ್ಕಾಗಿ ಸೂಕ್ತ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಇದು ಶಿವಕುಮಾರ್ ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಅವರು ಸಿ.ಎಂ ಆಗಬೇಕೆಂಬ ಭಾವನೆಯನ್ನು ನಾನಷ್ಟೇ ಅಲ್ಲದೆ, ಪಕ್ಷದ 80ರಿಂದ 90 ಶಾಸಕರು ಹೊಂದಿದ್ದಾರೆ’ ಎಂದರು.

‘ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಅವರು ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆಂಬ ನಂಬಿಕೆ ನಮಗಿದೆ. ಮುಖ್ಯಮಂತ್ರಿ ಹುದ್ದೆ ಕುರಿತು ನಾನಾಗಲಿ ಅಥವಾ ತಂದೆ ಮೇಲಿನ ವ್ಯಾಮೋಹಕಕ್ಕಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಾಗಲಿ ಮಾತನಾಡಬಾರದು. ಈ ಎಲ್ಲಾ ಬೆಳವಣಿಗೆಗೂ ಕೆಲವೇ ದಿನಗಳಲ್ಲಿ ತೆರೆ ಬೀಳಲಿದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.