ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹರೂರು ರಾಜಣ್ಣ ಹೇಳಿದರು.
ಪಟ್ಟಣದ ಕೋಟೆ ನ್ಯೂ ಸನ್ ರೈಸ್ ಮತ್ತು ನಿವೇದಿತಾ ಪ್ರೌಢಶಾಲೆಯಲ್ಲಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಆಯೋಜಸಿದ್ದ ತಾಲ್ಲೂಕು ಮಟ್ಟದ ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಜಂತುಹುಳು ಮಕ್ಕಳ ರಕ್ತ ಹೀನತೆಗೆ, ಬೆಳವಣಿಗೆ ಕುಂಠಿತವಾಗಲು ಕಾರಣವಾಗಿದ್ದು, ಆರೋಗ್ಯ ಇಲಾಖೆಯವರು ಉಚಿತವಾಗಿ ನೀಡುತ್ತಿರುವ ಜಂತುಹುಳ ಮಾತ್ರೆಗಳನ್ನು ಸೇವಿಸಿ ಜಂತುಹುಳು ಬಾಧೆಯಿಂದ ವಿಮುಕ್ತರಾಗಿ ಆರೋಗ್ಯವಂತರಾಗಬೇಕು. ಎಲ್ಲ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಬಹಳ ಮುಖ್ಯ. ಎಲ್ಲರು ತಮ್ಮ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ಮಾತನಾಡಿ, ‘ಜಂತುಹುಳುಗಳಿಂದ ಮನುಷ್ಯನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆರೋಗ್ಯದಲ್ಲೂ ಬಹಳಷ್ಟು ಏರುಪೇರು ಉಂಟಾಗುತ್ತದೆ. ಆರೋಗ್ಯ ಇಲಾಖೆ ಇದನ್ನು ಗಮನಿಸಿ ಜಂತುಹುಳು ಬಾಧೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂದರಿಂದ 19 ವರ್ಷದ ವಯೋಮಾನದ ತಾಲ್ಲೂಕಿನ ಎಲ್ಲ ಶಾಲಾ ಕಾಲೇಜಿನ ಮಕ್ಕಳಿಗೂ ಉಚಿತವಾಗಿ ವರ್ಷದಲ್ಲಿ ಎರಡು ಬಾರಿ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ನೀಡಲಾಗುತ್ತಿದೆ. ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.
ಮುಖ್ಯ ಶಿಕ್ಷಕ ರಂಜನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ, ಶಾಲಾ ಆಡಳಿತಾಧಿಕಾರಿ ಎಂ.ಹೇಮಾವತಿ, ಆರೋಗ್ಯಾಧಿಕಾರಿ ಸಿದ್ದರಾಮು, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಅಕ್ಷರ ದಾಸೋಹ ಸಹ ನಿರ್ದೇಶಕ ಸಿದ್ದರಾಜು, ಶಿಕ್ಷಣ ಸಮಯೋಜಕ ರಾಜಶೇಖರ್, ದೈಹಿಕ ಶಿಕ್ಷಕ ಪ್ರದೀಪ್ ಕುಮಾರ್, ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.