ಚನ್ನಪಟ್ಟಣ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮುಖ್ಯವಾಗಿ ಆತ್ಮವಿಶ್ವಾಸ, ಜಾಗೃತಿ ಮೈಗೂಡಿಸಿಕೊಳ್ಳಬೇಕು ಎಂದು ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಡಾ. ಜಗದೀಶ್ ಕಿವಿಮಾತು ಹೇಳಿದರು.
ತಾಲ್ಲೂಕಿನ ಕೋಡಂಬಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಕಾಲೇಜಿನ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಅಧ್ಯಯನದಲ್ಲಿ ಗ್ರಾಮೀಣ, ನಗರ ಎಂಬ ವ್ಯತ್ಯಯ ಇರುವುದಿಲ್ಲ. ಬದಲಾಗಿ ಅದು ವಿದ್ಯಾರ್ಥಿಯ ಶ್ರದ್ಧೆಯನ್ನು ಅವಲಂಬಿಸಿರುತ್ತದೆ ಎಂದರು.
ಹೃದ್ರೋಗ ತಜ್ಞ ಡಾ. ಬಸವರಾಜು ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮವಾಗಿ ಅಧ್ಯನ ಮಾಡಬೇಕು. ಇದಕ್ಕೆ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿ, ಪ್ರತಿ ವರ್ಷ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಪ್ರೋತ್ಸಾಹ ಧನ ನೀಡುತ್ತಿದ್ದೇನೆ. ಮುಂದೆಯೂ ಇದನ್ನು ಮುಂದುವರೆಸುತ್ತೇನೆ ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲೆ ಜಯಂತಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಬದ್ಧ ಜೀವನ ನಡೆಸಬೇಕು. ಇತರರಿಗೆ ಮಾದರಿಯಾಗುವ ಚಟುವಟಿಕೆಗಳನ್ನು ರೂಢಿಸಿಕೊಳ್ಳಬೇಕು. ಸಮಾಜದಲ್ಲಿ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ವಿದ್ಯಾಭ್ಯಾಸ ಮಾಡಬೇಕು ಎಂದರು.
ಬಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಮಾತನಾಡಿ, ಕಾಲೇಜಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪೀಠೋಪಕರಣಗಳನ್ನು ಒದಗಿಸಿದ್ದೇನೆ. ಮುಂದಿನ ದಿನಗಳಲ್ಲಿಯೂ ಕಾಲೇಜು ಅಭಿವೃದ್ಧಿಗೆ ಸಹಕರಿಸುತ್ತೇನೆ ಎಂದು ಭರವಸೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಮಾದು ಮಾತನಾಡಿ, ಕಾಲೇಜಿಗೆ ಬೇಕಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಿರಂತರ ಪ್ರಯತ್ನ ನಡೆಯುತ್ತಿದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿ ಆಯೋಜನೆಯಾಗುವ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿಸಿ, ಉತ್ತಮ ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತರಬೇಕು ಎಂದರು.
ಪ್ರಾಂಶುಪಾಲೆ ರಾಧಾ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಸದಸ್ಯೆ ಸುನೀತಾ ಸಿದ್ದಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಮಯ್ಯ, ಖಜಾಂಚಿ ಯೂನಿಸ್ ಖಾನ್, ಸದಸ್ಯರಾದ ಲಿಂಗರಾಜೇಗೌಡ, ಷಣ್ಮುಖ ರಾವ್ ಸಾಳಂಕಿ, ವಿಜಯಕುಮಾರ್, ರವಿಶಂಕರ್, ಪಟೇಲ್ ಶ್ರೀನಿವಾಸ್, ಎಸ್.ರಾಜಣ್ಣ, ಶಿವರಾಜು ಹಾಜರಿದ್ದರು.
ವಿದ್ಯಾರ್ಥಿನಿ ಸೌಮ್ಯ ಪ್ರಾರ್ಥಿಸಿದರು. ಉಪನ್ಯಾಸಕ ಶಂಭುಗೌಡ ಸ್ವಾಗತಿಸಿದರು. ಉಪನ್ಯಾಸಕ ದೇಶಿಗೌಡ ವಂದಿಸಿದರು. ಉಪನ್ಯಾಸಕಿ ಮಮತಾ ನಿರೂಪಿಸಿದರು. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.