ರಾಮನಗರ: ಮಾಗಡಿ ತಾಲ್ಲೂಕಿನ ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ಸಮಾಧಿಯನ್ನು 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದರು.
ಕೆಂಪಾಪುರದಲ್ಲಿರುವ ಕೆಂಪೇಗೌಡರ ಸಮಾಧಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು. ಕೆಂಪೇಗೌಡರ ಸಮಾಧಿ ಅಭಿವೃದ್ಧಿಗೆ 8 ಎಕರೆ ಜಮೀನು ಬೇಕಿದ್ದು, ಇದನ್ನು ಭೂಸ್ವಾಧೀನ ಮಾಡುವ ಕೆಲಸ ಪ್ರಾರಂಭಿಸಲಾಗುವುದು. ರೈತರಿಗೂ ಸಹ ಅನುಕೂಲವಾಗುವಂತೆ ಸುಸಜ್ಜಿತವಾಗಿ ಕೆಂಪಾಪುರದ ಸರ್ವಂಗೀಣ ಅಭಿವೃದ್ಧಿ ಮಾಡಲಾಗುವುದು. ಕೆಂಪಾಪುರದಲ್ಲಿರುವ ಕೆರೆಯ ಅಭಿವೃದ್ಧಿಗೂ 12 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ನೀಲನಕ್ಷೆ ಕೂಡ ಸಿದ್ಧಪಡಿಲಾಗಿದ್ದು, ಗ್ರಾಮಸ್ಥರು ಸಹಕಾರ ನೀಡಿದರೆ ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದರು.
ಸರ್ಕ್ಯೂಟ್ ನೆಟ್ವರ್ಕ್
ನಾಡಪ್ರಭು ಕೆಂಪೇಗೌಡರ ಕಾಲದ ದುರ್ಗ, ಕೆರೆ, ದೇವಸ್ಥಾನಗಳ ಸರ್ಕ್ಯೂಟ್ ನೆಟ್ವರ್ಕ ಸಹ ಸಿದ್ಧಪಡಿಸಲಾಗುವುದು ಎಂದರು.
108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸರ್ದಾರ್ ವಲ್ಲಾಬಾಯಿ ಪ್ರತಿಮೆಯ ರೀತಿಯಲ್ಲೇ 108 ಅಡಿ ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 23 ಎಕರೆಯ ವಿಸ್ತೀರ್ಣದಲ್ಲಿ ವಿಮಾನ ನಿಲ್ದಾಣದ ಮೂರು ಟರ್ಮಿನಲ್ ಸೇರುವ ಸ್ಥಳದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಜೂನ್ 27ರಂದು ಕೆಂಪೇಗೌಡರ ಜಯಂತಿ ದಿನದಂದು ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.