ADVERTISEMENT

‘ರಾಸು ಆರೋಗ್ಯ ರಕ್ಷಣೆಗೆ ಉಚಿತ ಫ್ಯಾನ್‌ ’

ಕೆಎಂಎಫ್‌ ಅಧ್ಯಕ್ಷ ಪಿ. ನಾಗರಾಜು ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2018, 14:17 IST
Last Updated 3 ಡಿಸೆಂಬರ್ 2018, 14:17 IST
ಕರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಂಘದ ಸದಸ್ಯರನ್ನು ಕೆಎಂಎಫ್‌ ಅಧ್ಯಕ್ಷ ಪಿ. ನಾಗರಾಜು ಹಾಗೂ ಶಾಸಕ ಮಂಜುನಾಥ್ ಸನ್ಮಾನಿಸಿದರು
ಕರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಂಘದ ಸದಸ್ಯರನ್ನು ಕೆಎಂಎಫ್‌ ಅಧ್ಯಕ್ಷ ಪಿ. ನಾಗರಾಜು ಹಾಗೂ ಶಾಸಕ ಮಂಜುನಾಥ್ ಸನ್ಮಾನಿಸಿದರು   

ಬಿಡದಿ (ರಾಮನಗರ): ರಾಸುಗಳ ಆರೋಗ್ಯ ರಕ್ಷಣೆಯ ಸಲುವಾಗಿ ರೈತರಿಗೆ ಉಚಿತವಾಗಿ ಫ್ಯಾನ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ತಿಳಿಸಿದರು.

ಬಿಡದಿ ಪುರಸಭೆ ವ್ಯಾಪ್ತಿಯ ಎಂ.ಕರೇನಹಳ್ಳಿ ಗ್ರಾಮದಲ್ಲಿ ₨17 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದನಗಳ ಕೊಟ್ಟಿಗೆಯಲ್ಲಿ ಸೊಳ್ಳೆ ಮತ್ತು ನೊಣಗಳ ಕಾಟ ಹೆಚ್ಚಾದ ಕಾರಣ ಒಕ್ಕೂಟವು ಈ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ಮ್ಯಾಟ್, ಹಾಲು ಕರೆಯುವ ಯಂತ್ರ ಇನ್ನಿತರ ಸೌಲಭ್ಯಗಳನ್ನು ರೈತರಿಗೆ ಉಚಿತವಾಗಿ ಕಲ್ಪಿಸಿಕೊಟ್ಟಿದೆ ಎಂದರು. ಹೈನುಗಾರಿಕೆಯಲ್ಲಿ ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿಕೊಂಡು ಹಾಲು ಉತ್ಪಾದನೆ ಹೆಚ್ಚಿಸಬೇಕು. ರಾಸುಗಳಿಗೆ ತಪ್ಪದೇ ವಿಮೆ ಮಾಡಿಸಬೇಕು ಎಂದು ಅವರು ಮನವಿ ಮಾಡಿದರು.

ಕರೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 110 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದ್ದು, ಪ್ರತಿ ದಿನ ಸುಮಾರು 1 ಸಾವಿರ ಲೀಟರ್ ಹಾಲನ್ನು ಸಂಗ್ರಹ ಮಾಡುತ್ತಿದೆ, ಇಲ್ಲಿ ರಾಜಕೀಯಕ್ಕೆ ಅವಕಾಶ ನೀಡದೇ ಪಕ್ಷಾತೀತವಾಗಿ ಸಂಘವನ್ನು ಮುನ್ನಡೆಸಿ ಎಂದು ಕಿವಿಮಾತು ಹೇಳಿದರು.

ADVERTISEMENT

ಕಟ್ಟಡವನ್ನು ಉದ್ಘಾಟಿಸಿದ ಶಾಸಕ ಎ.ಮಂಜುನಾಥ್ ಮಾತನಾಡಿ, ‘ಇಂದು ಬಹುತೇಕ ರೈತರು ಕೃಷಿ ಚಟುವಟಿಕೆಗಿಂತ ಹೆಚ್ಚಾಗಿ ಹೈನುಗಾರಿಕೆಗೆ ಆದ್ಯತೆ ನೀಡತೊಡಗಿದ್ದಾರೆ. ರೈತರ ಆರ್ಥಿಕ ಸ್ವಾವಲಂಬನೆಗೆ ಇದು ಸಹಕಾರಿಯಾಗಿದೆ’ ಎಂದರು. ರಾಸು ನಿರ್ವಹಣೆಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಹಾಲಿನಲ್ಲಿ ಕೊಬ್ಬಿನ ಅಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಕರೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀನಿವಾಸಯ್ಯ ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಲಕ್ಷ್ಮಿದೇವಿ ರವಿಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಸದಸ್ಯರಾದ ಬೋರೆಗೌಡ, ದೇವರಾಜು, ಲೋಕೇಶ್, ವೈ.ರಮೇಶ್, ಸಂತೋಷ್, ಶಿವಕುಮಾರ್, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಮಂಜು, ನಿರ್ದೇಶಕರಾದ ಶ್ರೀನಿವಾಸಯ್ಯ, ಚಂದ್ರಶೇಖರ್, ಶಿವರಾಮ್, ನಾಗರಾಜು, ಕಮಲಮ್ಮ, ಸಾಕಮ್ಮ, ಲಕ್ಷ್ಮಮ್ಮ, ಕಾರ್ಯದರ್ಶಿ ತಿಮ್ಮಯ್ಯ(ಪಟೇಲ್), ಬಮೂಲ್‌ ರಾಮನಗರ ಉಪವಿಭಾಗದ ವ್ಯವಸ್ಥಾಪಕ ಡಾ.ಶಿವಶಂಕರ್, ಮುಖಂಡರಾದ ಇಟ್ಟಮಡು ಸೋಮಣ್ಣ, ನಾಗೇಶ್ ಇದ್ದರು.

ಕಾಂಗ್ರೆಸ್ ಮುಖಂಡ ಎಚ್.ಸಿ.ಬಾಲಕೃಷ್ಣ ಕಟ್ಟಡ ಪ್ರಾರಂಭೋತ್ಸವದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.