ADVERTISEMENT

ಕೋಡಂಬಹಳ್ಳಿ: ಸರ್ಕಾರಿ ಬಸ್ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 5:51 IST
Last Updated 2 ಡಿಸೆಂಬರ್ 2021, 5:51 IST
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು   

ಚನ್ನಪಟ್ಟಣ: ‘ಸಮರ್ಪಕವಾಗಿ ಬಸ್ಸುಗಳು ಇಲ್ಲದ ಕಾರಣ ನಮಗೆ ತೊಂದರೆಯಾಗುತ್ತಿದೆ’ ಎಂದು ಆರೋಪಿಸಿ ಚನ್ನಪಟ್ಟಣ ಹಲಗೂರು ಎಲೆತೋಟದಹಳ್ಳಿ ಮಾರ್ಗದ ವಿದ್ಯಾರ್ಥಿಗಳು ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ಸರ್ಕಾರಿ ಬಸ್ ಗಳನ್ನು ತಡೆದು ಬುಧವಾರ ಪ್ರತಿಭಟನೆ ನಡೆಸಿದರು.

‘ಶಾಲಾ ಕಾಲೇಜಿಗೆ ಹೋಗುವ ವೇಳೆಗೆ ಸರ್ಕಾರಿ ಬಸ್ಸುಗಳು ಸಮರ್ಪಕವಾಗಿ ಇಲ್ಲ. ನೂರಾರು ಮಂದಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಿರುವ ಸಾರಿಗೆ ಇಲಾಖೆ ಬಸ್ಸುಗಳ ವ್ಯವಸ್ಥೆ ಮಾಡಿಲ್ಲ. ಇದರಿಂದ ನೂರಾರು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.

‘ಬಸ್ ಇಲ್ಲದ ಕಾರಣ ಶಾಲಾ ಕಾಲೇಜಿಗೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದ ತರಗತಿಗಳನ್ನು ತಪ್ಪಿಸಿಕೊಳ್ಳುವಂತಾಗಿದೆ. ಇದರಿಂದ ನಮಗೆ ಪಾಠ ಪ್ರವಚನಗಳನ್ನು ಕಲಿಯಲು ಸಾಧ್ಯವಾಗುತ್ತಿಲ್ಲ. ಕೊರೊನಾ ಕಾರಣ ನೀಡಿ ಬಸ್ ಗಳನ್ನು ನಿಲ್ಲಿಸಿದ್ದ ಇಲಾಖೆ ಈಗ ಶಾಲಾ ಕಾಲೇಜುಗಳು ಆರಂಭಗೊಂಡಿದ್ದರೂ ಸಮಯಕ್ಕೆ ಸರಿಯಾಗಿ ಬಸ್ ಗಳನ್ನು ವ್ಯವಸ್ಥೆ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಈ ಮಾರ್ಗದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳ ವ್ಯವಸ್ಥೆ ಮಾಡಬೇಕು. ನಮ್ಮ ಸಮಸ್ಯೆ ಕೇಳಲು ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಬರಬೇಕು. ಅಲ್ಲಿಯವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ’ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಕ್ಕೂರು ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿ, ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.