ರಾಮನಗರ: ಪತ್ನಿಯನ್ನು ಉಸಿರುಗಟ್ಟಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಜೀವ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₨5 ಸಾವಿರ ದಂಡ ವಿಧಿಸಿ ಶುಕ್ರವಾರ ಆದೇಶ ನೀಡಿತು.
ಬಿಡದಿ ಹೋಬಳಿಯ ಉರಗಹಳ್ಳಿ ಗ್ರಾಮದ ಬೈರವ(40) ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ ಕಸಬಾ ಹೋಬಳಿಯ ಮಾದಾಪುರ ಗ್ರಾಮದ ವಸಂತಾ ಎಂಬುವರನ್ನು ವಿವಾಹವಾಗಿದ್ದ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಬೈರವ ಬೇರೊಂದು ಮಹಿಳೆಯ ಜತೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದ. ಇದಕ್ಕೆ ಹೆಂಡತಿ ಅಡ್ಡಿಪಡಿಸುತ್ತಾಳೆಂಬ ಕಾರಣದಿಂದ 2016ರಲ್ಲಿ ಹೆಂಡತಿಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ್ದ.
ಈ ಘಟನೆಗೆ ಸಂಬಂಧಿಸಿದಂತೆ ವಸಂತಾರ ತಾಯಿ ಮಾಯಮ್ಮ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಬಿಡದಿ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಂ.ಜಿ. ಉಮಾ ಶಿಕ್ಷೆ ಪ್ರಮಾಣ ಪ್ರಕಟಿಸಿದರು. ಸರ್ಕಾರಿ ಅಭಿಯೋಜಕ ಎಲ್. ನಾಗರಾಜ್ ವಾದ ಮಂಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.